ಮುಂಬೈ: ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ದಾಳಿ, ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಮಂದಿ ಬಂಧನ
ಮುಂಬೈ: ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ 8 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದೆ.
ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಏಕಾಏಕಿ ದಾಳಿ ನಡೆಸಿದ ತಂಡ 8 ಮಂದಿಯನ್ನು ಬಂಧಿಸಿದ್ದು ಅವರ ಹೆಸರುಗಳನ್ನು ಬಿಡುಗಡೆ ಮಾಡಿದೆ. ಬಂಧಿತರು ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ ಆಗಿದ್ದಾರೆ ಎಂದು ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಬಂಧಿತ ಆರ್ಯನ್ ಖಾನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ. ನಿನ್ನೆ ಬಂಧನವಾದಾಗಿನಿಂದಲೇ ಹಲವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಆರ್ಯನ್ ಖಾನ್ ನ ಹೆಸರು ಜೋರಾಗಿ ಕೇಳಿಬರುತ್ತಿತ್ತು. ಇದು ಬಹಳ ಹೈಪ್ರೊಫೈಲ್ ಪಾರ್ಟಿಯಾಗಿದ್ದು ಎನ್ ಸಿಬಿ ಅಧಿಕಾರಿಗಳು ಆರೋಪಿಗಳಿಂದ ಮೊಬೈಲ್ ವಶಪಡಿಸಿಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಾಲಿವುಡ್ ನಂಟು?: ಸಮುದ್ರ ಮಧ್ಯೆ ಹಡಗಿನಲ್ಲಿ ನಟರು, ಉದ್ಯಮಿಗಳು ಮತ್ತು ಶ್ರೀಮಂತರ ಮಕ್ಕಳು ಸೇರಿ ಪಾರ್ಟಿ ಮಾಡುತ್ತಿದ್ದಾರೆ ಎಂದು ಎನ್ ಸಿಬಿಗೆ ಮಾಹಿತಿ ಸಿಕ್ಕಿತು. ಅದರ ಜಾಡು ಹಿಡಿದು ಕಳೆದ ಎರಡು ವಾರಗಳಿಂದ ಎನ್ ಸಿಬಿ ತೀವ್ರ ವಿಚಾರಣೆ ನಡೆಸಿ ಜಾಡು ಹಿಡಿದು ಹೊರಟಿತ್ತು. ಇದು ಎರಡು ವಾರಗಳ ನಿರಂತರ ತನಿಖೆಯ ಫಲಿತಾಂಶವಾಗಿದೆ, ನಿಖರ ಆಧಾರ ಸಿಕ್ಕಿಯೇ ನಾವು ದಾಳಿ ಮಾಡಿದ್ದೇವೆ. ಇದರಲ್ಲಿ ಬಾಲಿವುಡ್ ನಂಟು ಇರುವುದು ಸಹ ಬೆಳಕಿಗೆ ಬಂದಿದೆ ಎಂದು ಎನ್ ಸಿಬಿ ಮುಖ್ಯಸ್ಥ ಎಸ್ ಎನ್ ಪ್ರಧಾನ್ ತಿಳಿಸಿದ್ದಾರೆ.