Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಲಖಿಂಪುರ್ ಹಿಂಸಾಚಾರ: ಆರೋಪಿ ಆಶಿಶ್ ಮಿಶ್ರಾ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ಲಖಿಂಪುರ್: ಕಳೆದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಕಳೆದ ತಡರಾತ್ರಿ ಆಶಿಶ್ ಮಿಶ್ರಾ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಸತತ 12 ಗಂಟೆಗಳ ಕಾಲ ವಿಚಾರಣೆ ನಡೆಸಿ ನಂತರ ಕ್ರೈಮ್ ಬ್ರ್ಯಾಂಚ್ ಕಚೇರಿಯಲ್ಲಿ ವೈದ್ಯಕೀಯ ತಂಡ ತಪಾಸಣೆ ನಡೆಸಿ ನಂತರ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕರೆದೊಯ್ಯಲಾಯಿತು. ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ ಎಂದು ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಎಸ್ ಪಿ ಯಾದವ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಆಶಿಶ್ ಮಿಶ್ರಾನನ್ನು ಪೊಲೀಸ್ ಕಸ್ಟಡಿಗೊಪ್ಪಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಧೀಶರು ನಾಳೆ ಬೆಳಗ್ಗೆ 11 ಗಂಟೆಗೆ ನಡೆಯುವ ಸಾಧ್ಯತೆಯಿದೆ.

ಕಳೆದ ಅಕ್ಟೋಬರ್ 3ರಂದು ಲಖೀಂಪುರದಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು. ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯರ ಭೇಟಿಯನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಹರಿಸಿದ ವಾಹನಗಳ ಪೈಕಿ ಒಂದು ಕಾರಿನಲ್ಲಿ ಆಶಿಶ್ ಮಿಶ್ರಾ ಕೂಡ ಇದ್ದರು ಎಂಬುದು ಪ್ರತಿಭಟನಾಕಾರರು ಮತ್ತು ಪ್ರತಿಪಕ್ಷಗಳ ಆರೋಪವಾಗಿದೆ.

ನಂತರ ನಡೆದ ಹಿಂಸಾಚಾರ, ಆಕ್ರೋಶ-ಪ್ರತಿಭಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಮತ್ತು ಅವರ ಚಾಲಕರನ್ನು ಆಕ್ರೋಶಭರಿತ ರೈತರು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಿಂಸಾಚಾರದಲ್ಲಿ ಸ್ಥಳೀಯ ಪತ್ರಕರ್ತ ರಮಣ್ ಕಶ್ಯಪ್ ಕೂಡ ಅಸುನೀಗಿದ್ದಾರೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದ ಬಿಜೆಪಿ ಸರ್ಕಾರಕ್ಕೆ ತೀವ್ರ ತೊಂದರೆಯಾಗಿದೆ.

ಸ್ಥಳೀಯ ಜನರಲ್ಲಿ ಮೋನು ಬೈಯ ಎಂದು ಹೆಸರಾಗಿರುವ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರ ನಿನ್ನೆ ರಾತ್ರಿ ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಕಳೆದರು. ಎರಡನೇ ಬಾರಿ ಸಮನ್ಸ್ ಹೊರಡಿಸಿದ ನಂತರ ವಿಶೇಷ ತನಿಖಾ ತಂಡದ ಮುಂದೆ ನಿನ್ನೆ ಬೆಳಗ್ಗೆ 10.30ರ ಸುಮಾರಿಗೆ ಹಾಜರಾದರು. ಮೊದಲ ಬಾರಿ ಕರೆದಾಗ ಬಂದಿರಲಿಲ್ಲ. ನಿನ್ನೆ ತಡರಾತ್ರಿ 11 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ ಮತ್ತು ಅಪರಾಧ ವಿಭಾಗದ ಪೊಲೀಸರು ಸತತ ತನಿಖೆ ನಡೆಸಿ ಬಂಧನಕ್ಕೊಳಪಡಿಸಿದರು.

ಸುಮಾರು 35 ವರ್ಷದ ಆಶಿಶ್ ಮಿಶ್ರಾ ಉತ್ತರ ಪ್ರದೇಶದ ಖೇರಿ ಪ್ರಾಂತ್ಯದಲ್ಲಿ ತಮ್ಮ ತಂದೆಯ ರಾಜಕೀಯ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

No Comments

Leave A Comment