ಮಂಗಳೂರು: ಮಾರಲ್ ಪೊಲೀಸಿಂಗ್ ವಿಚಾರ – ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’ – ಸಿಎಂ
ಮಂಗಳೂರು, ಅ 13 : ಕರಾವಳಿ ಭಾಗದಲ್ಲಿ ಬೆಳಕಿಗೆ ಬಂದಿರೋ ಅನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ.ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ. ಮೊರಾಲಿಟಿ ಅನ್ನೋದು ಸಮಾಜದಲ್ಲಿ ಬೇಕಲ್ವಾ..? ನೈತಿಕತೆ ಇಲ್ಲದೆ ಬದುಕೋಕೆ ಆಗುತ್ತಾ ಎಂದು ಪ್ರಶ್ನಿಸಿದರು.
ಇವತ್ತು ನಾವು ನೈತಿಕತೆ ಇಲ್ಲದೆ ಬದುಕೋಕೆ ಆಗಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ಇರೋದು ನಮ್ಮ ನೈತಿಕತೆ ಮೇಲೆ. ಇದು ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಅಗುತ್ತೆ ಎಂದರು.
ಇನ್ನು ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ, ಕಳೆದ ವಾರ ನಮಗೆ 8 ರೇಕ್ ಬರ್ತಾ ಇತ್ತು.ಈಗ ಕೇಂದ್ರ ಸರ್ಕಾರದ ಜೊತೆ ಮಾತನಾಡಿದ ಮೇಲೆ 10 ರೇಕ್ ಕೊಡ್ತೀವಿ ಅಂತಾ ಹೇಳಿದ್ದಾರೆ.
ಇದು ಇನ್ನು ಎರಡ್ಮೂರು ದಿನಗಳಲ್ಲಿ ಬರುತ್ತದೆ ಎಂದರು.
ಇನ್ನು ಕೋವಿಡ್ ನಿಯಂತ್ರಣ ಮಾರ್ಗಸೂಚಿ ಸಡಿಲಿಕೆ ವಿಚಾರವಾಗಿ ಮಾತನಾಡಿದ ಅವರು, ದಸರಾ ಆದ ಬಳಿಕ ತಜ್ಞರ ಸಭೆ ಕರೆಯುತ್ತೇವೆ. ಗಡಿ ಜಿಲ್ಲೆಗಳ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಹಾಗೂಗಡಿ ಭಾಗದ ವ್ಯಾಕ್ಸಿನೇಷನ್ ಪ್ರಗತಿ ಬಗ್ಗೆ ವಿಚಾರಿಸುತ್ತೇವೆ. ಇದೇ ವೇಳೆ ಪ್ರಾಥಮಿಕ ಶಾಲೆ ತೆರೆಯುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.