Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಗಡಿ ವಿವಾದ: ಡಿ.14 ಅಥವಾ 15ರಂದು ಅಮಿತ್ ಶಾ ಜೊತೆ ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ಭೇಟಿ, ಸೋಮವಾರ ಸಂಸದರ ನಿಯೋಗ ಭೇಟಿ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಮತ್ತೆ ತಾರಕಕ್ಕೇರಿದೆ. ಕಳೆದ ಹತ್ತು ಹದಿನೈದು ದಿನಗಳಿಂದ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬೆನ್ನಲ್ಲೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಸಂಸದರು ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಸಂಸದರಿಗೆ ಸೂಚಿಸಿದ್ದಾರೆ. ಅಲ್ಲದೆ ಮಹಾರಾಷ್ಟ್ರದ ನಿಯೋಗವು ಕೇಂದ್ರ ಗೃಹಸಚಿವರನ್ನು ಭೇಟಿಯಾಗಿರುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ, ನಾವು ಕೂಡ ಗೃಹಸಚಿವರನ್ನು ಭೇಟಿಯಾಗಿ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ‌. ಈ ಪ್ರಕರಣ ಸುಪ್ರೀಂ ಕೊರ್ಟ್​​ನಲ್ಲಿದೆ. ಸುಪ್ರೀಂ ಕೋರ್ಟ್​ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ರಾಜ್ಯ ಸಂಸದರು ಭೇಟಿ: ಇಂದು ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪನವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ವಿಧಾನಸೌಧ ಆವರಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಸಂಸದರಿಗೆ ಸೋಮವಾರ ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಹೇಳಿದ್ದೇನೆ. ಇನ್ನು ಎರಡು ಮೂರು ದಿನಗಳೊಳಗೆ ಮಹಾರಾಷ್ಟ್ರ ಮತ್ತು ಕರ್ನಾಟಕ ಮುಖ್ಯಮಂತ್ರಿಗಳನ್ನು ಕರೆದು ಮಾತುಕತೆ ನಡೆಸುತ್ತೇನೆ ಎಂದು ಅಮಿತ್ ಶಾ ಅವರು ಹೇಳಿದ್ದಾರೆ.14 ಅಥವಾ 15ರಂದು ಸಭೆ ನಡೆಯಲಿದೆ, ನಾನು ವಾಸ್ತವಾಂಶಗಳನ್ನು ಈಗಾಗಲೇ ಕೇಂದ್ರ ನಾಯಕರಿಗೆ ತಿಳಿಸಿದ್ದೇನೆ. ಹಲವು ವರದಿಗಳನ್ನು ಕೂಡ ಕೊಟ್ಟಿದ್ದೇನೆ, ಕರ್ನಾಟಕ ನಿಲುವನ್ನು ಪ್ರತಿಪಾದಿಸುವ ಕೆಲಸ ಮಾಡುತ್ತೇನೆ ಎಂದರು.

ಎಸ್.ನಿಜಲಿಂಗಪ್ಪನವರು ನಾಡು ಕಂಡ ಮಹಾನ್ ಚೇತನ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ನಿರ್ಮಿಸಿದ್ದ ಪ್ರಬುದ್ಧ ಆಡಳಿತಗಾರರಾಗಿದ್ದರು. ದೇಶದ ಹಲವಾರು ಮಹೋನ್ನತ ಹುದ್ದೆಗಳನ್ನು ಅಲಂಕರಿಸಿದ್ದ ಹೆಮ್ಮೆಯ ಕನ್ನಡಿಗರಾಗಿದ್ದರು. ತತ್ವ,ಸಿದ್ದಾಂತದ ಜೊತೆ ಮೌಲ್ಯಾಧಾರಿತ, ಆದರ್ಶ ಹಾಗೂ ಮಾನವೀಯತೆಯ ರಾಜಕಾರಣವನ್ನು ಮುಂದಿನ ಪೀಳಿಗೆಗೆ ಪರಿಚಯಿಸಿದ್ದರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

No Comments

Leave A Comment