Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಮೋದಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ: ‘AnswerMadiModi’ ಹ್ಯಾಷ್ ಟ್ಯಾಗ್ ಆರಂಭಿಸಿ, ಟ್ವೀಟ್ ಮೂಲಕ ಪ್ರಶ್ನೆಗಳ ಸುರಿಮಳೆ!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆಯಲ್ಲಿ ನಿರತರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದು, ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

‘AnswerMadiModi’ ಹ್ಯಾಷ್ ಟ್ಯಾಗ್ ಆರಂಭಿಸಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ ಎಂದು ಕಿಡಿಕಾರಿದ್ದಾರೆ.

ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ. ಎನ್.ಸಿ.ಆರ್.ಬಿ ವರದಿ ಪ್ರಕಾರ ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ ಶೇ.72 ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯದ ಪ್ರಮಾಣ 2021ರಲ್ಲಿ ಶೇ.18ರಷ್ಟು ಹೆಚ್ಚಾಗಿದೆ. ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 1493% ರಷ್ಟು ಹೆಚ್ಚಾಗಿವೆ. 2021ರಲ್ಲಿ ಇಮ್ಮೊರಲ್ ಟ್ರಾಪಿಕಿಂಗ್ ಶೇ.61ರಷ್ಟು ಹೆಚ್ಚಾಗಿದೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆಗೆ ಅನುಮತಿ ನೀಡದೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ. ‘ಇದಕ್ಕೆಲ್ಲ ಯಾರು ಹೊಣೆ ನರೇಂದ್ರ ಮೋದಿಯವರೇ?’ ಎಂದು ಪ್ರಶ್ನಿಸಿದ್ದಾರೆ.

No Comments

Leave A Comment