Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಎಂಬ ಹೆಸರಿನ ನಾನು..ಟ್ರಬಲ್ ಶೂಟರ್ ನ ವರ್ಣರಂಜಿತ ರಾಜಕೀಯ ಬದುಕು!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು, ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಡಿ.ಕೆ.ಶಿವಕುಮಾರ್ 15ನೇ ಮೇ, 1962ರಂದು ಜನಿಸಿದರು.  ತಮ್ಮ 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐಗೆ ಸೇರ್ಪಡೆಯಾದರು.

ವಿದ್ಯಾಭ್ಯಾಸಕ್ಕೆಂದು ಶಿವಕುಮಾರ್‌ ಬೆಂಗಳೂರಿಗೆ ಬಂದರು. ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.ಮುಕ್ತ ವಿಶ್ವವಿದಾಲಯದಲ್ಲಿ ರಾಜಕೀಯ ಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿ ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದರಲ್ಲಿ ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಬಂಗಾರಪ್ಪ ಶಿವಕುಮಾರ್‌ಗೆ ಬಂಧಿಖಾನೆ ಸಚಿವ ಸ್ಥಾನ ನೀಡಿದರು.

1994ರಲ್ಲಿ ಪಕ್ಷ ಟಿಕೆಟ್ ನೀಡಲಿಲ್ಲ. ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿದರು. ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್‍ ದರ್ಜೆ ಸಚಿವರಾಗಿ ಕೆಲಸ ಮಾಡಿದರು. ಸಹಕಾರ ಸಚಿವರಾಗಿ, ನಗರಾಭಿವೃದ್ಧಿ ಖಾತೆ ಮತ್ತು ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದರು.(1999-2002).

2004ರಲ್ಲಿ ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರು. ಈ ವೇಳೆ ಪಕ್ಷ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು.  2008ರಲ್ಲಿ ಮತ್ತೆ ಶಿವಕುಮಾರ್‌ ಶಾಸಕರಾದರು. ಈ ವೇಳೆ ಬಿಜೆಪಿ ಅಧಿಕಾರ ಪಡೆಯಿತು.

2013ರಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರ ಪಡೆಯಿತು. ಸಿದ್ಧರಾಮಯ್ಯ ಮುಖ್ಯಮಂತ್ರಿಯಾದರು. ಇಂಧನ ಸಚಿವರಾಗಿ ಕೆಲಸ ಮಾಡಿದರು. 2018ರಲ್ಲಿ ಕಾಂಗ್ರೆಸ್‌ ಪಕ್ಷ ಪೂರ್ಣ ಬಹುಮತ ಪಡೆಯಲಿಲ್ಲ. ಈ ವೇಳೆ ಜೆಡಿಎಸ್‌ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿತು. ಜೆಡಿಎಸ್‌ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಈ ವೇಳೆ ಶಿವಕುಮಾರ್‌ ಜಲಸಂಪನ್ಮೂಲ ಸಚಿವರಾದರು.  ಸರ್ಕಾರ ರಚನೆಯಾಗಿ ಕೆಲವೇ ತಿಂಗಳಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿತು.

2023ರಲ್ಲಿ ಕಾಂಗ್ರೆಸ್‌ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರ ಗದ್ದುಗೆ ಹಿಡಿದಿದೆ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದು, ಶಿವಕುಮಾರ್‌ ಉಪಮುಖ್ಯಮಂತ್ರಿಯಾಗುತ್ತಿದ್ದಾರೆ.ಡಿ.ಕೆ. ಶಿವಕುಮಾರ್ ಅವರ ಪೂರ್ತಿ ಹೆಸರು ದೊಡ್ಡಲಹಳ್ಳಿ ಕೆಂಪೇಗೌಡ ಶಿವಕುಮಾರ್, ಜನನ 15 ಮೇ 1962. ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕ. ಅವರ ಕಿರಿಯ ಸಹೋದರ ಡಿ ಕೆ ಸುರೇಶ್ಅವರು ರಾಜಕಾರಣದಲ್ಲಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಶಿವಕುಮಾರ್ 1993 ರಲ್ಲಿ ಉಷಾ ಅವರನ್ನು ವಿವಾಹವಾದರು ಮತ್ತು ಐಶ್ವರ್ಯ ಮತ್ತು ಆಭರಣ ಎಂಬ ಇಬ್ಬರು ಪುತ್ರಿಯರನ್ನು ಹೊಂದಿದ್ದಾರೆ ಮತ್ತು ಮಗ ಆಕಾಶ್ ಇದ್ದಾರೆ. ಹಿರಿಯ ಮಗಳು ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ ಅವರ ಮಗ ಅಮರ್ತ್ಯ ಅವರನ್ನು ವಿವಾಹವಾಗಿದ್ದಾರೆ.

ಶಿವಕುಮಾರ್ ಅವರ ರಾಜಕೀಯ ಪಯಣ ಹಲವು ವಿವಾದಗಳಿಂದ ಕೂಡಿದೆ. 2019 ರಲ್ಲಿ  ಮನಿ ಲಾಂಡರಿಂಗ್ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತು. 50 ದಿನಗಳ ಕಾಲ ಜೈಲಿನಲ್ಲಿ ಕಳೆದ ನಂತರ, ಅಂತಿಮವಾಗಿ ಅವರಿಗೆ ಜಾಮೀನು ನೀಡಲಾಯಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಜೊತೆಗೆ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪಗಳನ್ನು ಶಿವಕುಮಾರ್ ಎದುರಿಸಿದ್ದಾರೆ. ಈ ವಿವಾದಗಳ ಹೊರತಾಗಿಯೂ, ಶಿವಕುಮಾರ್ ಕರ್ನಾಟಕ ರಾಜಕೀಯದಲ್ಲಿ ಪ್ರಭಾವವನ್ನು  ಜನಪ್ರಿಯತೆಯನ್ನು ಉಳಿಸಿಕೊಳ್ಳುವುದನ್ನು ಮುಂದುವರೆಸಿದ್ದಾರೆ. ಭವಿಷ್ಯದಲ್ಲಿ ಮುಖ್ಯಮಂತ್ರಿಯ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವಿರುವ ಪ್ರಮುಖ ವ್ಯಕ್ತಿ ಎಂದು ಆರಂಭದಲ್ಲಿ ಅವರನ್ನು ಪರಿಗಣಿಸಲಾಗಿತ್ತು. ಆದರೆ ಬದಲಾದ ರಾಜಕೀಯ ಸಮೀಕರಣದಲ್ಲಿ ಸಿದ್ಧರಾಮಯ್ಯ ಅವರನ್ನು ಸಿಎಂ ಎಂದು ಘೋಷಿಸಲಾಗಿದೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ.

No Comments

Leave A Comment