Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಆಡಳಿತಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ​ ಸರ್ಕಾರವು ಅಧಿಕಾರಕ್ಕೇರಿದಾಗಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಕಾರ, ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಜಾವೇದ್ ಅಖ್ತರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ವೈದ್ಯಕೀಯ ಶಿಕ್ಷಣ) ಎಸಿಎಸ್ ಆಗಿ ವರ್ಗಾವಣೆ ಮಾಡಲಾಗಿದೆ.

ಕೊಡಗು ಜಿಲ್ಲಾಧಿಕಾರಿಯಾಗಿ (ಡಿಸಿ) ಸೇವೆ ಸಲ್ಲಿಸುತ್ತಿದ್ದ ಬಿ.ಸಿ. ಸತೀಶ ಅವರನ್ನು ವರ್ಗಾವಣೆ ಮಾಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅವರ ಜಾಗಕ್ಕೆ ಕೋಲಾರ ಡಿಸಿ ಆಗಿದ್ದ ವೆಂಕಟ್ ರಾಜಾ ಅವರನ್ನು ನೇಮಿಸಲಾಗಿದೆ.

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಡಾ ಶಿವಶಂಕರ ಎನ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಸಿ ಆಗಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ಡಿಸಿ ಆಗಿದ್ದ ಲತಾ ಆರ್ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಕ್ರಂ ಪಾಷಾ ಅವರನ್ನು ಕೋಲಾರ ಜಿಲ್ಲಾಧಿಕಾರಿಯಾಗಿ ಹಾಗೂ ಫೌಜಿಯಾ ತರನಮ್ ಬಿ ಅವರನ್ನು ಕಲಬುರಗಿ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ.

ಗಂಗೂಬಾಯಿ ರಮೇಶ್ ಮಾನಕರ್ ಅವರು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ನೇಮಕಗೊಂಡರೆ, ಡಾ. ಗೋಪಾಲ್ ಕೃಷ್ಣ ಎಚ್ಎನ್ ಅವರನ್ನು ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿಯ ಜಂಟಿ ನಿರ್ದೇಶಕರಾಗಿ (ಸುಧಾರಣೆಗಳು) ಪೋಸ್ಟ್ ಮಾಡಲಾಗಿದೆ. ನಾಗರಾಜ ಎನ್‌ಎಂ ಅವರನ್ನು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ಯೋಜನಾ ನಿರ್ದೇಶಕರಾಗಿ ಮತ್ತು ಭನ್ವರ್ ಸಿಂಗ್ ಮೀನಾ ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಮಹದೇವಪುರ ವಲಯ ಬಿಬಿಎಂಪಿ ಜಂಟಿ ಆಯುಕ್ತರಾಗಿದ್ದ ಲಿಂಗಮೂರ್ತಿ ಜಿ ಅವರು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

ಡಾ. ಗಿರೀಶ್ ದಿಲೀಪ್ ಬಡೋಲೆ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿ ಮತ್ತು ನೋಂಗ್‌ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ವಿಜಯನಗರ ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ.

No Comments

Leave A Comment