Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಾರ್ಗದಲ್ಲಿ ಹಿಂಸಾಚಾರ ಸೃಷ್ಟಿಯಾಗುವ ಆತಂಕ: ರಾಹುಲ್ ಗಾಂಧಿ ಬೆಂಗಾವಲು ಪಡೆ ವಾಹನ ತಡೆದ ಮಣಿಪುರ ಪೊಲೀಸರು

ಇಂಫಾಲ: ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

ರಾಹುಲ್ ಗಾಂಧಿ ಇಂದು ಬೆಳಗ್ಗೆ ಇಂಫಾಲ್ ಗೆ ಬಂದಿಳಿದರು ಹಾಗೂ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ.

ಮಣಿಪುರಕ್ಕೆ ಇಂದು ಭೇಟಿ ನೀಡಿದ್ದ ರಾಹುಲ್ ಗಾಂಂಧಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ, ಸಂಕಷ್ಟಕ್ಕೊಳಗಾದ ಜನರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದರು. ಆದರೆ, ಇಂಫಾಲದಿಂದ 20 ಕಿಲೋಮೀಟರ್ ದೂರದಲ್ಲಿರುವ ಬಿಷ್ಣುಪುರದಲ್ಲಿ ಮಣಿಪುರ ಪೊಲೀಸರು ಅವರನ್ನು ತಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಬಿಷ್ಣುಪುರ್ ಜಿಲ್ಲೆಯ ಉಟ್ಲೌ ಗ್ರಾಮದ ಬಳಿ ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಗಾವಲು ಪಡೆಗೆ ಕೆಲವು ಕಲ್ಲುಗಳನ್ನು ಎಸೆಯಲಾಗಿತ್ತು. ಹೀಗಾಗಿ ಮಾರ್ಗದಲ್ಲಿ ಹಿಂಸಾಚಾರ ಸೃಷ್ಟಿಯಾಗುವ ಆತಂಕದಿಂದ ಅವರನ್ನು ತಡೆಹಿಡಿಯಲಾಯಿತು ಎಂದು ತಿಳಿಸಿದ್ದಾರೆ.

ಮತ್ತೆ ಹಿಂಸಾಚಾರ ಭುಗಿಲೇಳುವ ಆತಂಕದಲ್ಲಿದ್ದೇವೆ. ಹೀಗಾಗಿ ರಾಹುಲ್ ಗಾಂಧಿಯವರ ಬೆಂಗಾವಲು ವಾಹನವನ್ನು ತಡೆದು, ಬಿಷ್ಣುಪುರದಲ್ಲಿಯೇ ತಂಗುವಂತೆ ಮನವಿ ಮಾಡಿಕೊಳ್ಳಲಾಯಿತು ಎಂದು ಹೇಳಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ರಾಹುಲ್ ಗಾಂಧಿಗೆ ಕೈ ಬೀಸಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು, ಆದರೆ, ನಮ್ಮನ್ನೇಕೆ ತಡೆದಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಸಂಕಷ್ಟಕ್ಕೊಳಗಾದವರ ಭೇಟಿಗೆ ಪೊಲೀಸರು ನಮಗೇಕೆ ಅವಕಾಶ ನೀಡುತ್ತಿಲ್ಲ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಸಂತ್ರಸ್ತರನ್ನು ಭೇಟಿ ಮಾಡಲಷ್ಟೇ ರಾಹುಲ್ ಗಾಂಧಿ ಸ್ಥಳಕ್ಕೆ ತೆರಳಿದ್ದಾರೆ. ನಾವು ಸುಮಾರು 20-25 ಕಿಮೀ ಸಂಚರಿಸಿದ್ದೆವು. ಆದರೆ, ಎಲ್ಲಿಯೂ ರಸ್ತೆ ತಡೆ ಇರಲಿಲ್ಲ. ರಾಹುಲ್ ಗಾಂಧಿ ಕಾರಿನೊಳಗೆ ಕುಳಿತಿದ್ದಾರೆ. ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದು ಯಾರು ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ತಿಳಿಸಿದ್ದಾರೆ.

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

No Comments

Leave A Comment