
ಮಣಿಪುರ ರಾಜ್ಯಪಾಲರನ್ನು ಭೇಟಿಯಾದ 20 ವಿಪಕ್ಷ ಸಂಸದರ ನಿಯೋಗ: ಅವಲೋಕನದ ವಿವರ ಸಲ್ಲಿಕೆ
ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದ 20 ವಿಪಕ್ಷ ಸಂಸದರ ನಿಯೋಗ, ಅಲ್ಲಿನ ರಾಜ್ಯಪಾಲರಾದ ಅನುಸೂಯ ಉಯಿಕೆಯವರನ್ನು ಭೇಟಿ ಮಾಡಿ ಅವಲೋಕನ ಕುರಿತ ಜ್ಞಾಪನಾಪತ್ರವನ್ನು ಭಾನುವಾರ ಸಲ್ಲಿಸಿದ್ದಾರೆ.
ಪರಿಶಿಷ್ಟ ಪಂಗಡದ ಸ್ಥಾನಮಾನ ಕುರಿತಂತೆ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಘರ್ಷಣೆಗಳು ನಡೆದ ನಂತರ ನಡೆಯುತ್ತಿರುವ ಹಿಂಸಾಚಾರ ತಡೆಯುವ ಕುರಿತಂತೆ ನಾಯಕರು ಚರ್ಚೆ ನಡೆಸಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಅವರು, ‘ಇಂಡಿಯಾ ಮೈತ್ರಿಕೂಟದ ಸಂಸದರು ಮಣಿಪುರದ ರಾಜ್ಯಪಾಲರನ್ನು ಭೇಟಿಯಾಗಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚಿಸಿದೆವು. ಎಲ್ಲರೂ ಒಟ್ಟಾಗಿ ಸಮಸ್ಯೆ ಪರಿಹರಿಸುವುದು ಅಗತ್ಯವಾಗಿದೆ ಎಂಬ ನಮ್ಮ ಮನವಿಯನ್ನು ಅವರು ಅಂಗೀಕರಿಸಿದರು.
ಸಮುದಾಯದ ನಡುವಿನ ಅಪನಂಬಿಕೆಯನ್ನು ಹೋಗಲಾಡಿಸಲು ಜನರೊಂದಿಗೆ ಚರ್ಚೆ ನಡೆಸುವ ದೃಷ್ಟಿಯಿಂದ ಸರ್ವಪಕ್ಷ ನಿಯೋಗ ಮಣಿಪುರಕ್ಕೆ ಭೇಟಿ ನೀಡಬೇಕು’ ಎಂದು ಹೇಳಿದರು. ಅಲ್ಲದೆ, ಇಲ್ಲಿನ ಅವಲೋಕನಗಳನ್ನು ಸಂಸತ್ತಿನಲ್ಲಿ ಮಂಡಿಸುವುದಾಗಿಯೂ ತಿಳಿಸಿದರು.