
ಬಿಟ್ಕಾಯಿನ್ ಹಗರಣ: ಬೆಂಗಳೂರಿನ ಆರೋಪಿಗಳ ಮನೆಗಳ ಮೇಲೆ ಎಸ್ಐಟಿ ದಾಳಿ
ಬೆಂಗಳೂರು: ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಪಿಗಳ ಕಿಂಗ್ಪಿನ್ ಸೇರಿದಂತೆ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ದಾಳಿ ವಿಶೇಷ ತನಿಖಾ ತಂಡ(ಎಸ್ಐಟಿ) ನಡೆಸುತ್ತಿದೆ.
ಜಯನಗರದಲ್ಲಿರುವ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಅವರ ನಿವಾಸದ ಮೇಲೆ ದಾಳಿ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರ ಬಡಾವಣೆಯಲ್ಲಿರುವ ಇತರ ಆರೋಪಿಗಳಾದ ಸುನೀಶ್ ಹೆಗ್ಡೆ ಮತ್ತು ಪ್ರಸಿದ್ಧ್ ಅವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಅಧಿಕಾರಿಗಳು ನಿನ್ನೆ ನ್ಯಾಯವ್ಯಾಪ್ತಿಯ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದಿದ್ದು, ಮುಂಜಾನೆಯಿಂದ ದಾಳಿ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಸಂಕೀರ್ಣ ಪ್ರಕರಣದಲ್ಲಿ ಇಸ್ರೇಲ್ ಅಧಿಕಾರಿಗಳ ನೆರವು ಪಡೆಯುವ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ.
ರಾಜ್ಯದ ಬಿಜೆಪಿಯ ಉನ್ನತ ನಾಯಕರು ಭಾಗಿಯಾಗಿದ್ದಾರೆ ಎನ್ನಲಾದ ಬಿಟ್ಕಾಯಿನ್ ಹಗರಣದ ಮರುತನಿಖೆಗೆ ನಿರ್ದೇಶನ ನೀಡಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ತನಿಖೆಯನ್ನು ಕೈಗೆತ್ತಿಕೊಳ್ಳಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಅಡಿಯಲ್ಲಿ ಎಸ್ಐಟಿ ರಚಿಸಲಾಗಿದೆ.
ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ‘ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಲಕ್ಷ ಕೋಟಿ ಹಣ ವಂಚನೆ ಆಗಿರುವ ಬಗ್ಗೆ ಚರ್ಚೆ ನಡೆಸಿದ್ದೆವು. ಈಗ ಮರು ತನಿಖೆಗೆ ಆದೇಶಿಸಿದ್ದೇವೆ. ಸಿಐಡಿ ಅಡಿಯಲ್ಲಿ ಎಸ್ಐಟಿ ರಚನೆಯಾಗಿದೆ. ಹಗರಣದಲ್ಲಿ ತಾಂತ್ರಿಕ, ಅಂತಾರಾಜ್ಯ ಮತ್ತು ಅಂತರಾಷ್ಟ್ರೀಯ ವಿಷಯಗಳಿವೆ ಎಂದು ಅವರು ಹೇಳಿದ್ದರು.