Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರಿಂದ ದಾಳಿ, ತೀವ್ರ ಶೋಧ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಎಲ್ಲೆಲ್ಲಿ ದಾಳಿ, ಬೆಂಗಳೂರಿನಲ್ಲಿ 11 ಕಡೆ ದಾಳಿ: ಬೆಂಗಳೂರಿನಲ್ಲಿಯೇ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಆರ್‌ ಪುರದಲ್ಲಿನ ಎಆರ್‌ಒ ಎಆರ್ ಓ ಚಂದ್ರಪ್ಪ ಬಿರಜ್ಜನವರ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು. ಎಆರ್‌ಒಗೆ ಸಂಬಂಧಪಟ್ಟ ಮೂರು ಕಡೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್.ನಗರ ವಲಯಾಧಿಕಾರಿಯಾಗಿರುವ ಚಂದ್ರಪ್ಪ. ಕೆ.ಆರ್.ಪುರಂ ನಿವಾಸದಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಈ ಹಿಂದೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದ ಎಆರ್ ಓ ಚಂದ್ರಪ್ಪ ಲೋಕಾಯುಕ್ತ ಟ್ರ್ಯಾಪ್ ಗೆ ಒಳಗಾಗಿದ್ದ. ಅದರ ಮುಂದುವರಿದ ಭಾಗವಾಗಿ ಲೋಕಾಯುಕ್ತರು ದಾಳಿ ಮಾಡಿ ಶೋಧಕಾರ್ಯ ನಡೆಸಿರುವ ಅಧಿಕಾರಿಗಳು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಂದ್ರಪ್ಪ ಇದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಭ್ರಷ್ಟಚಾರದ ಆರೋಪ ಹೊತ್ತಿರುವ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಇಬ್ಬರ ಮನೆಗಳಿಗೆ ಸೂರ್ಯೋದಯಕ್ಕೂ ಮುನ್ನವೇ ವಾಹನಗಳಲ್ಲಿ ಪ್ರತ್ಯೇಕ ತಂಡವಾಗಿ ಆಗಮಿಸಿದ ಅಧಿಕಾರಿಗಳಿಂದ ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಚಿತ್ರದುರ್ಗದ ಲೋಕಾಯುಕ್ತ ಎಸ್ಪಿ ವಾಸುದೇವ ರಾವ್ ನೇತೃತ್ವದಲ್ಲಿ ಈ ಎರಡೂ ದಾಳಿ ನಡೆಸಲಾಗಿದೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರಿಗೆ ಸೇರಿದ ಹಿರಿಯೂರು ನಗರದ ಚಂದ್ರಾ ಲೇಔಟ್ ನಲ್ಲಿರುವ ಮನೆಗೆ ಒಂದು ತಂಡ ಆಗಮಿಸಿದ್ದರೆ, ನಾಯ್ಕ್ ಅವರಿಗೆ ಸೇರಿದ್ದೆನ್ನಲಾಗಿರುವ ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಗೆ ಎರಡನೇ ತಂಡ ಹೋಗಿದೆ.

ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ
ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಹೆಚ್ ಇ.ನಾರಾಯಣ ಎಂಬುವವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

ಹಾವೇರಿಯಲ್ಲಿ ದಾಳಿ: ಹಾವೇರಿಯ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿಯಾಗಿದೆ. ಹಾವೇರಿ ಆರ್ ಎಫ್ ಒ ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ ಆರ್ ಎಫ್ಒ ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಮನೆಗಳಲ್ಲಿ ಶೋಧ ನಡೆಸಿದ್ದಾರೆ.

ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ‌: ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.‌ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ ಕೆಬಿಜೆಎನ್ ಎಲ್ ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆಯ ಆರೋಪ ಹಿನ್ನಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

No Comments

Leave A Comment