ಲಕ್ಷಾ೦ತರ ಬೃಹತ್ ಭಕ್ತ ಜನ ಸ್ತೋಮದ ನಡುವೆ ಸಾಗಿ ಬ೦ದ ಶ್ರೀಶೀರೂರು ಶ್ರೀವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಮೆರವಣಿಗೆ....
ಬಿಜೆಪಿ- ಜೆಡಿಎಸ್ ಸಮನ್ವಯ ಸಭೆ: ಎಲ್ಲಾ 28 ಸ್ಥಾನಗಳಲ್ಲಿ ಗೆಲ್ಲುತ್ತೇವೆ- ಹೆಚ್.ಡಿ. ದೇವೇಗೌಡ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಮನ್ವಯ ಸಭೆ ಬೆಂಗಳೂರಿನಲ್ಲಿಂದು ನಡೆಯಿತು.
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಸಭೆಯಲ್ಲಿ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, 28 ಕ್ಷೇತ್ರ ಗೆಲ್ಲೋದು ನಮ್ಮ ಗುರಿಯಾಗಿದೆ. ಪರಸ್ಪರ ಮಾತನಾಡಿಕೊಂಡು ಕೆಲಸ ಮಾಡಬೇಕು ಎಂದು ಮೈತ್ರಿ ಪಕ್ಷಗಳ ನಾಯಕರಿಗೆ ಕರೆ ನೀಡಿದರು.
ಸಭೆ ಬಳಿಕ ಮಾತನಾಡಿದ ಹೆಚ್. ಡಿ. ದೇವೇಗೌಡ, ಮೊದಲ ಬಾರಿಗೆ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಯಿತು. ಎಲ್ಲಾ ನಾಯಕರು ಹಾಜರಿದ್ದರು. ನಾವು ಕರ್ನಾಟಕದ ಜನತೆಗೆ ಒಂದು ಉತ್ತಮ ಸಂದೇಶವನ್ನು ನೀಡಿದ್ದೇವೆ – ಕಾಂಗ್ರೆಸ್ ವಿರುದ್ಧ ಹೋರಾಡಿ, ಅದನ್ನು ಸೋಲಿಸುತ್ತೇವೆ ಮತ್ತು ಎಲ್ಲಾ 28 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಮೊದಲ ಬಾರಿಗೆ ದೇವೇಗೌಡರು ಬಿಜೆಪಿಯನ್ನು ಬೆಂಬಲಿಸಿ ಎನ್ಡಿಎ ಸೇರಿದ್ದಾರೆ. ಕರ್ನಾಟಕದಲ್ಲಿ ಅದರಲ್ಲೂ ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ಹಲವು ಕಡೆ ಪ್ರಬಲವಾಗಿದೆ ಎಂದು ನಂಬಿದ್ದೇನೆ. ಹಾಗಾಗಿ ಅವರ ಮತಗಳನ್ನು ನಾವು ಪಡೆಯುತ್ತೇವೆ. ಎಲ್ಲಾ 28 ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಪ್ರಧಾನಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಭರವಸೆ ಇದೆ ಎಂದು ಹೇಳಿದರು.
ಬಿ.ವೈ. ವಿಜಯೇಂದ್ರ ಮಾತನಾಡಿ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಆಶೀರ್ವಾದ ನಮಗೆ ಆನೆ ಬಲ ತಂದಿದೆ. ಈ ಸಭೆ ಬಹಳ ಹಿಂದೆಯೇ ಆಗಬೇಕಾಗಿತ್ತು. ಈ ಸಮ್ಮಿಲನ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಆಗಲಿದೆ. ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಹೊಂದಾಣಿಕೆ ಆಗಿತ್ತು. ಆದರೆ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಅಂದಿನ ಕಾಲಘಟ್ಟದಲ್ಲಿ ದೇವೇಗೌಡರ ಸಮ್ಮತಿ ಇರಲಿಲ್ಲ ಎಂಬುದೂ ಗೊತ್ತಿರುವ ವಿಚಾರ. ಇದೀಗ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿರುವುದು ಆನೆ ಬಲ ತಂದಿದೆ ಎಂದು ಹೇಳಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕಾದರೆ ನಾವೆಲ್ಲರೂ ಒಟ್ಟಾಗಿ ಸೇರಿ ಕಾಂಗ್ರೆಸ್ ವಿರುದ್ಧ ಶಕ್ತಿಯಾಗಬೇಕು ಎಂಬ ಸಂದೇಶವನ್ನು ನಾಯಕರು ರವಾನಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಸೋಲಿಸುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.