Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

Shakti Scheme: ಉಚಿತ ಬಸ್ ಪ್ರಯಾಣ ಟಿಕೆಟ್ ನ ಹಾರವನ್ನು ಸಿಎಂಗೆ ನೀಡಿದ ಹಾಸನದ ಕಾನೂನು ವಿದ್ಯಾರ್ಥಿನಿ!

ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ತನ್ನ ಕೃತಜ್ಞತೆ ಮೆರೆದ ಅಪರೂಪದ ಘಟನೆ ನಡೆಯಿತು.

ಇದರಿಂದ ಖುಷಿಯಾದ ಸಿಎಂ ಸಿದ್ದರಾಮಯ್ಯನವರು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು ಬಹುಶ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ಸಂಧರ್ಭದಲ್ಲಿ ಸಿಎಂ ಕಡೆಗೆ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಎಂ. ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

‘ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ’’ ಎಂದು ವಿದ್ಯಾರ್ಥಿನಿ ಹೇಳಿದಳು ಎಂದು ಸಿಎಂ ಬರೆದುಕೊಂಡಿದ್ದಾರೆ.

ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪ ಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು’ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ರಾಜ್ಯದ ಮಹಿಳೆಯರಿಗೆ ಸರ್ಕಾರದ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ಈ ಯೋಜನೆ ಯಶಸ್ವಿಯಾಗಿದೆ. ಹಲವು ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳನ್ನೇ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುತ್ತಿದೆ.

No Comments

Leave A Comment