ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಹಾಗೂ ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಆ ದಿನದಿಂದಲೂ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಮೊದಲ ಬಾರಿ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಲಾಗಿತ್ತು, ಒಂದು ದಿನ ಮುಂಚಿತವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ ಪಡೆಯಲಾಯ್ತು, ಅದಾದ ಬಳಿಕ ಮತ್ತೆ ಎರಡು ದಿನಗಳ ಕಾಲ ಕಸ್ಟಡಿಗೆ ಕೇಳಿ ಪಡೆಯಲಾಗಿತ್ತು. ಅಲ್ಲಿಗೆ ಒಟ್ಟು 12 ದಿನಗಳ ಕಾಲ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾರೆ. ಈಗ 13 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಬೇಕಿದ್ದು, ಇಂದೇ (ಜೂನ್ 22) ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ. ಜುಲೈ 4 ರ ವರೆಗೆ ದರ್ಶನ್ ಹಾಗೂ ಅವರ ಸಂಗಡಿಗರು ಜೈಲಿನಲ್ಲಿರಬೇಕಾಗಿದೆ.

ಇಂದು ಪೊಲೀಸರು, ಆರೋಪಿಗಳಿಗೆ ನ್ಯಾಯಾಂಗ ಬಂಧನ ಕೋರಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು, ಅದನ್ನು ಪುರಸ್ಕರಿಸಿದ ನ್ಯಾಯಾಧೀಶ ಜಯಕುಮಾರ್ ಜಾಟ್ಲಾ ಅವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ವಿಚಾರಣೆಗೆ ಕರೆತರುವ ಮುನ್ನ ಪೊಲೀಸರು ಆರೋಪಿಗಳ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದರು. ನ್ಯಾಯಾಲಯಕ್ಕೆ ಬಂದ ಬಳಿಕವೂ ಸಹ ನ್ಯಾಯಾಧೀಶರು ಆರೋಪಿಗಳನ್ನು ಉದ್ದೇಶಿಸಿ, ಪೊಲೀಸರಿಂದ ಏನಾದರೂ ಸಮಸ್ಯೆ ಆಗಿದೆಯೇ ಎಂದು ಕೇಳಿ ಮಾಹಿತಿ ಪಡೆದುಕೊಂಡರು. ಅಂತಿಮವಾಗಿ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು.

ಈ ವೇಳೆ ಪೊಲೀಸರ ಪರ, ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು ವಾದ ಮಂಡಿಸಿ, ಈ ಪ್ರಕರಣದ ಆರೋಪಿಗಳನ್ನು ಬೇರೆ-ಬೇರೆ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಆರೋಪಿಗಳ ಪರ ವಕೀಲರಾದ ಪ್ರವೀಣ್ ತಿಮ್ಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಕೊನೆಗೆ ಈ ವಿಚಾರದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಯ್ತು.

ದರ್ಶನ್ ಪರವಾಗಿ ಇಂದು (ಜೂನ್ 22) ನ್ಯಾಯಾಲಯದಲ್ಲಿ ವಕೀಲ ಕೀಲ ಪ್ರವೀಣ್ ತಿಮ್ಮಯ್ಯ ವಾದ ಮಂಡಿಸಿದರು. ಪ್ರವೀಣ್ ತಿಮ್ಮಯ್ಯ ಅವರು ಹಿರಿಯ ವಕೀಲ ಸಿ.ವಿ.ನಾಗೇಶ್ ಅವರೊಂದಿಗೆ ಚರ್ಚಿಸಿ ವಾದಕ್ಕೆ ಆಗಮಿಸಿದಾರೆ ಎನ್ನಲಾಗುತ್ತಿದೆ. ದರ್ಶನ್ ಪ್ರಕರಣದಲ್ಲಿ ಇನ್ನು ಮುಂದೆ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ.

No Comments

Leave A Comment