ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಪಶ್ಚಿಮ ಬಂಗಾಳದಲ್ಲಿ ಮತ್ತೆರಡು ಲೈಂಗಿಕ ದೌರ್ಜನ್ಯ ಪ್ರಕರಣ, ಪರಿಸ್ಥಿತಿ ಉದ್ವಿಗ್ನ: ಅಪ್ರಾಪ್ತೆ ಮೇಲೆ, ನರ್ಸ್ ಗೆ ಕಿರುಕುಳ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರ ಮಧ್ಯೆ, ಮಹಿಳೆ ಮೇಲೆ ಮತ್ತೊಂದು ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ.

ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಮತ್ತೊಂದು ಘಟನೆಯಲ್ಲಿ ಬಿರ್ಭೂಮ್ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ರೋಗಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ನಿನ್ನೆ ಶನಿವಾರ ರಾತ್ರಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳದ ಸುದ್ದಿ ಬೆಳಕಿಗೆ ಬಂದ ತಕ್ಷಣ, ಸ್ಥಳೀಯರು ರೊಹಂಡಾ ಪಂಚಾಯತ್‌ನ ರಾಜಬರಿ ಪ್ರದೇಶದಲ್ಲಿ ಆರೋಪಿ ಮನೆಯ ಹೊರಗೆ ಪ್ರತಿಭಟನೆ ಆರಂಭಿಸಿದರು. ಉದ್ರಿಕ್ತ ಗುಂಪು ಆರೋಪಿಯ ಮನೆ ಮತ್ತು ಆತನ ಸಂಬಂಧಿಕರ ಅಂಗಡಿಯನ್ನು ಧ್ವಂಸಗೊಳಿಸಿದರು. ಬಳಿಕ ಆರೋಪಿಯನ್ನು ಬಂಧಿಸಲಾಯಿತು.

ಈ ಪ್ರಕರಣದಲ್ಲಿ ಟಿಎಂಸಿ ನಾಯಕ, ಪಂಚಾಯತ್ ಸದಸ್ಯೆಯ ಪತಿಯೂ ಆಗಿದ್ದು, ಸಂತ್ರಸ್ತೆಯ ಕುಟುಂಬಕ್ಕೆ ವಿಷಯವನ್ನು ದೊಡ್ಡದು ಮಾಡದೆ ಅಲ್ಲಿಗೇ ಇತ್ಯರ್ಥಪಡಿಸುವಂತೆ ಕೇಳಿದ್ದಾರೆ ಎಂದು ಸುದ್ದಿಯಾಗಿದ್ದು ಪ್ರತಿಭಟನಾಕಾರರು ಮತ್ತಷ್ಟು ಕ್ರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕುಪಿತಗೊಂಡ ಗುಂಪು ಪಂಚಾಯತ್ ಸದಸ್ಯರ ಮನೆ ಮೇಲೆ ದಾಳಿ ನಡೆಸಿತು. ಇದರ ನಂತರ, ಪೊಲೀಸರು ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (RAF) ಸಿಬ್ಬಂದಿಯನ್ನು ಪ್ರದೇಶದಲ್ಲಿ ನಿಯೋಜಿಸಿ ಗುಂಪನ್ನು ಚದುರಿಸಲು ಅಶ್ರುವಾಯು ಬಳಸಿತು.

ಸಿಪಿಎಂ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ ಎಂದು ಪಂಚಾಯಿತಿ ಸದಸ್ಯನ ಕುಟುಂಬ ಆರೋಪಿಸಿದೆ. ಮತ್ತೊಂದು ಘಟನೆಯಲ್ಲಿ, ಬಿರ್ಭುಮ್ ಜಿಲ್ಲೆಯ ಇಲಂಬಜಾರ್ ಕೇಂದ್ರದ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ರೋಗಿಯೊಬ್ಬರು ಕಿರುಕುಳ ನೀಡಿದ್ದಾರೆ. ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡುತ್ತಿದ್ದಾಗ ಆರೋಪಿಯು ನರ್ಸ್‌ಗೆ ಅನುಚಿತವಾಗಿ ಸ್ಪರ್ಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಸುರಕ್ಷತೆಯ ಕೊರತೆಯಿಂದಾಗಿ ಇಂತಹ ಘಟನೆಗಳು ಸಂಭವಿಸುತ್ತವೆ. ರೋಗಿಯು ತನ್ನ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕರ್ತವ್ಯದಲ್ಲಿರುವ ನರ್ಸ್ ಗೆ ಹೀಗೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸುತ್ತಿದ್ದಾರೆ. ನಂತರ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆರೋಪಿ ರೋಗಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

No Comments

Leave A Comment