ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಸಾಕ್ಷಿ ನೀಡುವಂತೆ AAP ಆಗ್ರಹ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ವಿಕೆ ಸಕ್ಸೇನಾ ಅವರು ಅನುಮತಿ ನೀಡಿದ್ದಾರೆಂದು ತಿಳಿದುಬಂದಿದೆ.

ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಇದೀಗ ಲೆಫ್ಟಿನೆಂಟ್ ಗವರ್ನರ್ ಅವರು ವಿಚಾರಣೆಗೆ ಅನುಮತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ವಿಚಾರಣೆಗೆ ಅನುಮತಿ ನೀಡಿರುವುದು ಕೇಜ್ರಿವಾಲ್ ಅವರಿಗೆ ದೊಡ್ಡ ಸಂಕಷ್ಟ ಎದುರಾದಂತಾಗಿದೆ.

ಕೇಜ್ರಿವಾಲ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಆರೋಪದಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು, ಆದರೆ ವಿಚಾರಣೆ ಆರಂಭವಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಅನುಮೋದನೆಯನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದ ನಂತರ, ಇಡಿ ಅನುಮತಿ ಕೋರಿ ಪತ್ರ ಬರೆದಿತ್ತು.

ಕೇಜ್ರಿವಾಲ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮಾಡಿದ ಬಹುದೊಡ್ಡ ಆರೋಪಗಳಲ್ಲಿ ಮದ್ಯ ನೀತಿ ಹಗರಣವೂ ಒಂದಾಗಿದೆ. ಹಗರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಇಡಿ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥರು ಸೆಪ್ಟೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2025ರ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಮರು ಆಯ್ಕೆ ಮಾಡಿದ ಬಳಿಕವೇ ಉನ್ನತ ಹುದ್ದೆಗಳಿಗೆ ಮರಳುವುದಾಗಿ ಪ್ರತಿಜ್ಞೆ ಮಾಡಿದ್ದರು.

ಕೇಜ್ರಿವಾಲ್‌ ಮತ್ತು ಸಿಸೋಡಿಯಾ ಅವರು 100 ಕೋಟಿ ಲಂಚ ಪಡೆಯುವ ಸಲುವಾಗಿ 2021-22ನೇ ಸಾಲಿನ ಅಬಕಾರಿ ನೀತಿಯಲ್ಲಿ ಬದಲಾವಣೆ ತಂದಿದ್ದರು. ಇದರಲ್ಲಿ 45 ಕೋಟಿ ರೂ.ಗಳನ್ನ ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದರು ಎಂಬುದು ಇ.ಡಿ ಆರೋಪ. ಈಗಾಗಲೇ ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸಲ್ಲಿಸಿದ ಅರ್ಜಿಗೆ ಉತ್ತರವನ್ನು ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಹೆಚ್ಚುವರಿ ಸಮಯವನ್ನು ನೀಡಿದೆ.

ಸಾಕ್ಷಿ ನೀಡುವಂತೆ ಆಪ್ ಆಗ್ರಹ

ಈ ಮಧ್ಯೆ ಎಎಪಿ ಸಂಸದ ಸಂಜಯ್ ಸಿಂಗ್ ವರದಿಗಳನ್ನು “ನಕಲಿ ಸುದ್ದಿ” ಎಂದು ಹೇಳಿದ್ದಾರೆ. ‘ಬೆಳಿಗ್ಗೆಯಿಂದ ಈ ಸುಳ್ಳು ಸುದ್ದಿ ಹರಿದಾಡುತ್ತಿದೆ. ಈ ಮಾಹಿತಿಯ ಮೂಲ ನನಗೆ ತಿಳಿದಿಲ್ಲ. ದೆಹಲಿ ಎಲ್‌ಜಿ ಯಾವುದೇ ಅನುಮತಿ ನೀಡಿದ್ದರೆ, ಅವರು ಅದನ್ನು ಸಾರ್ವಜನಿಕಗೊಳಿಸಬೇಕು. ಅನುಮತಿ ನೀಡಿರುವ ಪತ್ರ ಎಲ್ಲಿದೆ? ದೆಹಲಿ ಎಲ್‌ಜಿ ಅಂತಹ ಯಾವುದೇ ಪತ್ರವನ್ನು ನೀಡಿಲ್ಲ ಎಂದು ಹೇಳಿದ್ದಾರೆ.

ಎಎಪಿ ಮುಖ್ಯ ವಕ್ತಾರ ಪ್ರಿಯಾಂಕಾ ಕಕ್ಕರ್ ಅವರು ಮಾತನಾಡಿ, ಲೆಫ್ಟಿನೆಂಟ್ ಗವರ್ನರ್ ಅವರು ಅನುಮತಿ ನೀಡಿದ್ದರೆ, ಅನುಮತಿ ನೀಡಿರುದಕ್ಕೆ ಸಾಕ್ಷಿ ಒದಗಿಸಲಿ ಎಂದು ಆಗ್ರಹಿಸಿದ್ದಾರೆ.

ಎಲ್‌ಜಿ ಸಕ್ಸೇನಾ ಅವರು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಇಡಿಗೆ ಅಧಿಕಾರ ನೀಡಿಲ್ಲ. ಇದು ಸುಳ್ಳು ಸುದ್ದಿ. ಅಂತಹ ಅನುಮತಿ ನೀಡಿದ್ದೇ ಆದರೆ, ಇಡಿ ಅನುಮತಿ ಪತ್ರವನ್ನು ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.

No Comments

Leave A Comment