.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮುಡಾ ಹಗರಣ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಕೇಸ್ ಸಂಕಷ್ಟ
ಮೈಸೂರು:ಫೆ.3, ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಬೇನಾಮಿ ಆಸ್ತಿ ಹೊಂದಿದ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಬೇನಾಮಿ ಆಸ್ತಿ ಸಂಬಂಧ ಸ್ನೇಹಯಿ ಕೃಷ್ಣ ಅವರು ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಂದು ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣಿ ಎನ್ನುತ್ತಿದ್ದ ಸಿದ್ದರಾಮಯ್ಯಗೆ ಮುಡಾ ಹಗರಣ ಕಂಟಕವಾಗಿದೆ. ಈ ಪ್ರಕರಣ ತನಿಖೆ ಹಂತದಲ್ಲಿರುವಾಗೇ ಇದೀಗ ಬೇನಾಮಿ ಆಸ್ತಿ ಆರೋಪ ಕೇಳಿಬಂದಿದೆ.
ಮೈಸೂರು ತಾಲೂಕು ಆಲನಹಳ್ಳಿ ಗ್ರಾಮದ ಸರ್ವೆ ನಂ 113/4ರಲ್ಲಿ 1 ಎಕರೆ ಭೂಮಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 1983ರ ಡಿಸೆಂಬರ್ 15 ರಂದು ಆಲನಹಳ್ಳಿಯ ಹನುಮೇಗೌಡ, ಹನುಮಯ್ಯ, ಕರಿಯಪ್ಪ ಹಾಗೂ ಕೆಂಪಮ್ಮ ಎಂಬುವರಿಂದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿ ಮಾಡಿದ್ದಾರೆ. 1996ರಲ್ಲಿ ಅಂತಿಮ ಅಧಿಸೂಚನೆ ಆಗಿರುವ ಭೂಮಿಯನ್ನು ಮಲ್ಲಿಕಾರ್ಜುನ ಸ್ವಾಮಿ ಡಿನೋಟಿಫೈ ಮಾಡಿಸಿದ್ದು, 2006 ರಲ್ಲಿ ಮಲ್ಲಿಕಾರ್ಜುನಸ್ವಾಮಿಯಿಂದ ಕೃಷಿ ಭೂಮಿಯನ್ನು ಅನ್ಯಕ್ರಾಂತ ಮಾಡಿಸಿ ಆದೇಶ ಹೊರಡಿಸಲಾಗಿದೆ. ಅದೇ ಭೂಮಿಯನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ 2010 ಅಕ್ಟೋಬರ್ 20ರಲ್ಲಿ ದಾನ ಮಾಡಿದ್ದಾರೆ. ಪಾರ್ವತಿ ಕೂಡ 2010ರ ನವೆಂಬರ್ 11ರಂದು ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಭೂಮಿ ಬಂದ ಒಂದೇ ತಿಂಗಳಲ್ಲಿ ದಾನ ಮಾಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ತಮಗೆ ಬಂದ ಭೂಮಿಯನ್ನ 2011ರ ಮಾರ್ಚ್ 23 ರಂದು ಬೇರೆಯವರಿಗೆ ಮಾರಾಟ ಮಾಡಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.