ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ Shootout; ದರೋಡೆಕೋರರ ಕಾಲಿಗೆ ಗುಂಡು, ಇಬ್ಬರ ಬಂಧನ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ದರೋಡೆ ಮಾಡಿ ಪೊಲೀಸರಿಗೆ ಸಿಗದೇ ಪರಾರಿಯಾಗುತ್ತಿದ್ದ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿದ್ದಾರೆ.

ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಬಂಧಿತರನ್ನು ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಇತರ ಮೂವರು ಆರೋಪಿಗಳು ಪರಾರಿಯಾಗಿದ್ದು ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ರಾತ್ರಿ ಬೈಕ್ ಸವಾರರನ್ನು ಸುಲಿಗೆ ಮಾಡಿ ಮನೆಯೊಂದರಿಂದ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಶೂಟೌಟ್ ಮಾಡಿದ್ದರಿಂದ ಗಾಯಗೊಂಡ ಇಬ್ಬರನ್ನು ಬಂಧಿಸಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರು ಪೊಲೀಸ್ ಸಿಬ್ಬಂದಿಯನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತರ ಭೇಟಿ

ಇನ್ನು ಘಟನೆಯ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದರೋಡೆ ಪ್ರಕರಣಗಳ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ 17 ಕಡೆ ನಾಕಾಬಂದಿ ಹಾಕಲಾಗಿತ್ತು. ಈ ಮಧ್ಯೆ ಸೋಮವಾರ ಮಧ್ಯಾರಾತ್ರಿ ಬೈಕ್ ಮೇಲೆ ಹೊರಟಿದ್ದ ಕುಂದಗೋಳ ಮೂಲದ ವ್ಯಕ್ತಿಯೊಬ್ಬರಿಗೆ ನಾಲ್ಕೈದು ಮಂದಿಯ ತಂಡ ಹಲ್ಲೆ ನಡೆಸಿ ಬೈಕ್ ಸೇರಿ ನಗದು, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.

ಇದಾದ ಸ್ವಲ್ಪ ಸಮಯದ ನಂತರ ರವಿಚಂದ್ರ ಎಂಬವರನ್ನು ಸುಲಿಗೆ ಮಾಡಿತ್ತು. ತದನಂತರ ಮಂಟೂರು ರಸ್ತೆಯಲ್ಲಿ ಶಾರಿಕ್ ಎಂಬವರ ಮನೆಗೆ ಕನ್ನ ಹಾಕಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ನಮ್ಮ ಸಿಬ್ಬಂದಿ ಅಲರ್ಟ್ ಆಗಿದ್ದರು. ಅನುಮಾನಾಸ್ಪದವಾಗಿ ಬೈಕ್ ಮೇಲೆ ವೇಗವಾಗಿ ಹೋಗುತ್ತಿದ್ದವರ ತಪಾಸಣೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ ಆಗಲು ಯತ್ನಿಸಿದ್ದಾರೆ. ಆಗ ನಮ್ಮ ಸಿಬ್ಬಂದಿ ಅವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ತಿಳಿಸಿದರು.

ಪೊಲೀಸ್ ಸಿಬ್ಬಂದಿಗಳಿಗೂ ಗಾಯ

ದುಷ್ಕರ್ಮಿಗಳ ದಾಳಿಯಿಂದ ಪಿಎಸ್ಐ ಅಶೋಕ್ ಸೇರಿ ಮೂವರು ಸಿಬ್ಬಂದಿಗೆ ಗಾಯವಾಗಿದೆ. ಈ ವೇಳೆ ಪೊಲೀಸರು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಇದರಿಂದ ಇಬ್ಬರು ಆರೋಪಿಗಳಿಗೆ ತಲಾ ಒಂದು ಗುಂಡು ತಗುಲಿದೆ. ಇತರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಗುಂಡೇಟು ತಿಂದ ದಿಲೀಪ್ ಮತ್ತು ನೀಲೇಶ್ ಗುಜರಾತ್ ಮೂಲದವರು.

ಇವರಿಬ್ಬರ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿಯ ಜೈನ್ ಮಂದಿರದ ಹುಂಡಿಯಲ್ಲಿದ್ದ 4 ಲಕ್ಷ ರೂ. ಕಳವು ಪ್ರಕರಣ, ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣ ವ್ಯಾಪ್ತಿಯ ಎರಡು ಅಂಗಡಿಗಳಿಗೆ ಕನ್ನ ಹಾಕಿರುವ ಪ್ರಕರಣದಲ್ಲಿ ಇವರು ಆರೋಪಿಗಳು. ಉಳಿದಂತೆ ಇವರ ಮೇಲೆ ಗದಗ ದಲ್ಲಿ, ಬಳ್ಳಾರಿ, ಚಿತ್ರದುರ್ಗ ಸೇರಿ ಹಲೋ ಜಿಲ್ಲೆಗಳಲ್ಲಿ ಇವರ ಮೇಲೆ 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದರು.

No Comments

Leave A Comment