
ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿ-ಹೈಕೋರ್ಟ್ ನ್ಯಾ.ಕಾಮೇಶ್ವರ ರಾವ್
ಉಡುಪಿ:ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಜ್ಯ ಕಾನೂನು ಸೇವಾ ಪಾಧಿಕಾರದ ಕಾರ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ|ಕಾಮೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.
ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್ಜಿಎಮ್ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ವಕೀಲರು ಪ್ರಕರಣಗಳನ್ನು ಜಯಿಸಲು ಸಾಕಷ್ಟು ಅಧ್ಯಯನ, ಚಿಂತನೆ ನಡೆಸಬೇಕಾಗುತ್ತದೆ. ಅಂತೆಯೇ ನ್ಯಾಯಾಧೀಶರು ಉತ್ತಮ ತೀರ್ಪು ನೀಡಲು ಅಧ್ಯಯನ ನಡೆಸಬೇಕಾಗುತ್ತದೆ. ಆದರಿಂದ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ. ಅದನ್ನು ನಿರ್ವಹಿಸಲು ಕ್ರೀಡೆ ಸುಲಭ ಮಾರ್ಗ. ವಕೀಲರ ಸಂಘ ಕ್ರೀಡಾ ಪಂದ್ಯಾಟಗಳನ್ನು ನಿರಂತರವಾಗಿ ನಡೆಸುತ್ತಿರಬೇಕು. ಅದರಿಂದ ರಾಜ್ಯ, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ವಕೀಲರ ನಡುವೆ ಪರಸ್ಪರ ಸಮನ್ವಯ ಹಾಗೂ ಸೌಹಾರ್ದ ಬೆಳೆಯುತ್ತದೆ ಎಂದರು.
ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾರಾಜೇಶ್ ರೈ.ಕೆ.ಮಾತನಾಡಿ, ಕ್ರೀಡೆ ಮತ್ತು ನ್ಯಾಯಾಂಗ ವ್ಯವಸ್ಥೆ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ವಕೀಲರು ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ಅವರಲ್ಲಿನ ಕ್ರಿಯಾಶೀಲತೆ ಹೆಚ್ಚಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾಇ.ಎಸ್.ಇಂದಿರೇಶ್ ಮಾತನಾಡಿ, ಪ್ರತಿನಿತ್ಯ ಕನಿಷ್ಠ ವ್ಯಾಯಾಮ ಮಾಡಬೇಕಾಗುತ್ತದೆ. ಅದು ಆರೋಗ್ಯಕ್ಕೂ ಉತ್ತಮ ಮತ್ತು ವಕೀಲ ವೃತ್ತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕಾರಿ ಎಂದರು.
