....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ರೋಹಿತ್ ಶರ್ಮಾರನ್ನು ಟೀಕಿಸುವ ಪೋಸ್ಟ್ ಅಳಿಸಲು ವಕ್ತಾರೆ ಶಮಾ ಮೊಹಮ್ಮದ್ಗೆ ಸೂಚನೆ, ಎಚ್ಚರಿಕೆ ನೀಡಿದ ಕಾಂಗ್ರೆಸ್
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ದೇಹತೂಕದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಸೋಮವಾರ ತನ್ನ ವಕ್ತಾರೆ ಶಾಮಾ ಮೊಹಮ್ಮದ್ ಅವರಿಗೆ ಛೀಮಾರಿ ಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿನ ತಮ್ಮ ಪೋಸ್ಟ್ಗಳನ್ನು ಅಳಿಸಲು ಮತ್ತು ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಮೊಹಮ್ಮದ್ ಅವರು ಭಾನುವಾರ ತಡರಾತ್ರಿ ಮಾಡಿದ ಎಕ್ಸ್ನಲ್ಲಿನ ಪೋಸ್ಟ್ಗಳನ್ನು ಅಳಿಸಿದ್ದಾರೆ.
ಕ್ರಿಕೆಟ್ ದಂತಕಥೆಯ ರೋಹಿತ್ ಶರ್ಮಾ ಬಗ್ಗೆ ಶಮಾ ಮೊಹಮ್ಮದ್ ಅವರ ಹೇಳಿಕೆಗಳು ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
‘ಕ್ರೀಡಾಪಟುವಾಗಿ ರೋಹಿತ್ ಶರ್ಮಾ ಅವರ ದೇಹತೂಕ ಹೆಚ್ಚಾಗಿದೆ. ಅವರು ತೂಕವನ್ನು ಇಳಿಸಬೇಕಾಗಿದೆ ಮತ್ತು ಸಹಜವಾಗಿ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ!’ ಎಂದು ವಕ್ತಾರೆ ಶಮಾ ಮೊಹಮ್ಮದ್ ಬರೆದಿದ್ದರು.
ಮತ್ತೊಂದು ಪೋಸ್ಟ್ನಲ್ಲಿ ಶಮಾ, ‘ಸೌರವ್ ಗಂಗೂಲಿ, ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ಕಪಿಲ್ ದೇವ್, ರವಿಶಾಸ್ತ್ರಿ ಮತ್ತು ಉಳಿದ ನಾಯಕರಿಗೆ ಹೋಲಿಸಿದರೆ ರೋಹಿತ್ ಶರ್ಮಾ ಅವರಲ್ಲಿ ಇರುವ ವಿಶೇಷ ಗುಣ ಯಾವುದು? ಎಂದು ಪ್ರಶ್ನಿಸಿದ್ದರು. ಇದು ಬಿಜೆಪಿ ನಾಯಕರು ಸೇರಿದಂತೆ ಎಲ್ಲೆಡೆ ಟೀಕೆಗೆ ಗುರಿಯಾಗಿತ್ತು.
ಕಾಂಗ್ರೆಸ್ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರೆಯಾದ ಡಾ. ಶಮಾ ಮೊಹಮ್ಮದ್ ಅವರು ಕ್ರಿಕೆಟ್ ದಂತಕಥೆಯ ಬಗ್ಗೆ ಕೆಲವು ಟೀಕೆಗಳನ್ನು ಮಾಡಿದ್ದಾರೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಈ ಪೋಸ್ಟ್ಗಳನ್ನು ಅಳಿಸುವಂತೆ ಅವರಿಗೆ ಸೂಚಿಸಲಾಗಿದ್ದು, ಭವಿಷ್ಯದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೇಶಕ್ಕೆ ಕ್ರೀಡಾಪಟುಗಳು ನೀಡಿರುವ ಕೊಡುಗೆಗಳನ್ನು ಗೌರವಿಸುತ್ತದೆ ಮತ್ತು ಅವರ ಪರಂಪರೆಯನ್ನು ದುರ್ಬಲಗೊಳಿಸುವ ಯಾವುದೇ ಹೇಳಿಕೆಗಳನ್ನು ಅನುಮೋದಿಸುವುದಿಲ್ಲ’ ಎಂದು ಖೇರಾ ಹೇಳಿದ್ದಾರೆ.