....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ: ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್ ಜನಾರ್ಧನ್ ಕೊನೆಯುಸಿರೆಳೆದಿದ್ದಾರೆ.
ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.
ಕನ್ನಡ ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಜನಾರ್ದನ್ ಮಿಂಚಿದ್ರು. 80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್ ಸಿನಿಮಾ, ತರ್ಲೆ ನಾನ್ ಮಗ , ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಗೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ಗಮನ ಸೆಳೆದಿದ್ದಾರೆ.