.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಸೋನು ನಿಗಂ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲ ನೊಟೀಸ್ಗೆ ಉತ್ತರ ನೀಡದೇ ಇದ್ದಾಗ ಎರಡನೇ ನೊಟೀಸ್ ಅನ್ನು ಕಳಿಸಲಾಗಿತ್ತು. ಅದರ ಬೆನ್ನಲ್ಲೆ ಗಾಯಕ ಸೋನು ನಿಗಂ ತಮ್ಮ ಮೇಲಿನ ಎಫ್ಐಆರ್ ರದ್ದು ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದು ಇದೀಗ, ನ್ಯಾಯಾಲಯವು ಬೆಂಗಳೂರು ಪೊಲೀಸರಿಗೆ ಸೋನು ನಿಗಂ ಪ್ರಕರಣ ಸಂಬಂಧ ಕೆಲ ಸೂಚನೆಗಳನ್ನು ನೀಡಿದೆ.
ತನಿಖೆಗೆ ಹಾಜರಾಗಿಲ್ಲವೆಂದು ಹೆಚ್ಚುವರಿ SPP ಬಿ.ಎನ್.ಜಗದೀಶ್ ನ್ಯಾಯಾಲಯಕ್ಕೆ ಹೇಳಿದರು. ಬೆಂಗಳೂರಿಗೆ ಸೋನು ನಿಗಮ್ ಹಾಜರಾದರೆ ಸಮಸ್ಯೆ ಆಗಬಹುದು, ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಸೋನು ನಿಗಂ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾ.ಶಿವಶಂಕರ್ ಅಮರಣ್ಣವರ್ ಅವರು, ಸೋನು ನಿಗಂ ಅವರಿರುವ ಜಾಗದಲ್ಲಿಯೇ ವಿಚಾರಣೆ ಮಾಡುವಂತೆ ಅಥವಾ ವಿಡಿಯೋ ಕಾಲ್ ಮೂಲಕ ವಿಚಾರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಮಾತ್ರವಲ್ಲದೆ ಸೋನು ನಿಗಂ ಅವರ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಬಾರದು ಎಂದು ಸಹ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದರು. ನ್ಯಾಯಾಲಯದ ಸೂಚನೆಯಂತೆ ಬೆಂಗಳೂರು ಪೊಲೀಸರು ಮುಂಬೈಗೆ ಹೋಗಿ ಸೋನು ನಿಗಂ ನಿವಾಸದಲ್ಲಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.
ಇತ್ತೀಚೆಗಷ್ಟೆ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಲೈವ್ ಶೋ ಮಾಡಿದ್ದ ಸೋನು ನಿಗಂ ಹಿಂದಿ ಹಾಡುಗಳನ್ನು ಹಾಡುತ್ತಿದ್ದರು. ಆ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯ ಮಾಡಿದ. ಆಗ ತಾಳ್ಮೆ ಕಳೆದುಕೊಂಡ ಸೋನು ನಿಗಂ, ‘ಕನ್ನಡ, ಕನ್ನಡ ಇಂಥಹುದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದರು. ಕನ್ನಡಾಭಿಮಾನವನ್ನು ಭಯೋತ್ಪಾದನೆಗೆ ಹೋಲಿಸಿದ್ದಕ್ಕೆ ಕನ್ನಡಪರ ಸಂಘಟನೆಗಳು ಸೋನು ನಿಗಂ ವಿರುದ್ಧ ಪ್ರತಿಭಟನೆ ಮಾಡಿದ್ದು, ಸೋನು ನಿಗಂ ವಿರುದ್ಧ ನಿಷೇಧ ಹೇರಬೇಕು ಎಂದು ಚಿತ್ರರಂಗವನ್ನು ಒತ್ತಾಯಿಸಿದ್ದವು. ಅದರಂತೆ ಚಿತ್ರರಂಗದವರು, ಸೋನು ನಿಗಂಗೆ ಅಸಹಕಾರ ತೋರುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೆ ಗಾಯಕ ಸೋನು ನಿಗಂ, ಘಟನೆ ಬಗ್ಗೆ ಕನ್ನಡಿಗರ ಕ್ಷಮೆ ಕೇಳಿದರು.