....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 35ಕ್ಕೇರಿಕೆ; ಸಂತ್ರಸ್ತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ.

ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮಂಗಳವಾರ ಬೆಳಿಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಆದರೆ, ಸ್ಫೋಟಕ್ಕೆ ನಿಖರ ಕಾರಣ ಸಮಗ್ರ ಪರಿಶೀಲನೆಯ ಬಳಿಕವೇ ತಿಳಿಯಲಿದೆ ಎಂದು ತಾಂತ್ರಿಕ ತಜ್ಞರು ತಿಳಿಸಿದ್ದಾರೆ.

ತೆಲಂಗಾಣ ರಾಸಾಯನಿಕ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಕನಿಷ್ಠ ಎಂಟು ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಗಾಯಗೊಂಡ ಸುಮಾರು ಹನ್ನೆರಡು ಜನರಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿತ್ತು. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು ಎಂದು ಕಾರ್ಖಾನೆಯ ಮೂಲಗಳನ್ನು ಉಲ್ಲೇಖಿಸಿ ಐಜಿಪಿ ವಿ.ಸತ್ಯನಾರಾಯಣ ಹೇಳಿದ್ದರು. ಸತ್ತವರಲ್ಲಿ ಕೆಲವರ ಮೃತದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ.

No Comments

Leave A Comment