Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...

ಬೆಂಗಳೂರು: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಕ್ಲಾಸ್​ಮೇಟ್​ಗಳ ವಿರುದ್ಧ ಕೇಸ್ ದಾಖಲು

ಬೆಂಗಳೂರು: 22 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೂವರು ಕ್ಲಾಸ್​ಮೇಟ್​ಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹಾಸನದ ಮೃತ ಅರುಣ್ ಸಿ, ಕಳೆದ ಜುಲೈ 11 ರಂದು ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ವಿದ್ಯಾರ್ಥಿಯಾಗಿದ್ದ ಅರುಣ್, ಎಂಟನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ರಜೆಗಾಗಿ ಮನೆಗೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ, ದಿನಗೂಲಿ ಕಾರ್ಮಿಕರಾಗಿರುವ ಅರುಣ್ ಪೋಷಕರು ಕೆಲಸಕ್ಕೆ ಹೋಗಿದ್ದರು.

ಪೊಲೀಸರು ಡೆತ್ ನೋಟ್ ಅನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಅರುಣ್, ಯಾರ ಹೆಸರನ್ನೂ ಬರೆದಿಲ್ಲ ಮತ್ತು ಆತ್ಮಹತ್ಯೆಗೆ ಕಾರಣ ಸಹ ನೀಡಿಲ್ಲ.

ಆರಂಭದಲ್ಲಿ ಇದನ್ನು “ಅಸ್ವಾಭಾವಿಕ ಸಾವು” ಪ್ರಕರಣ ಎಂದು ದಾಖಲಿಸಲಾಗಿತ್ತು. ಆದರೆ, ಅರುಣ್ ಪೋಷಕರು ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ ನಂತರ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಾಲೇಜಿನ ವಾಟ್ಸಾಪ್ ಗ್ರೂಪ್‌ನಲ್ಲಿ ಅವರ ಮೂವರು ಕ್ಲಾಸ್ ಮೇಟ್ ಗಳು ತಮ್ಮ ಮಗನಿಗೆ “ಕಿರುಕುಳ” ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ “ಕಿರುಕುಳ” ತಮ್ಮ ಮಗನ ಸಾವಿಗೆ ಕಾರಣವಾಯಿತು ಎಂದು ಅವರು ದೂರಿದ್ದಾರೆ.

ಮೂವರು ಕ್ಲಾಸ್ ಮೇಟ್ ಗಳು ಅರುಣ್‌ಗೆ ಒಂದು ವರ್ಷಕ್ಕೂ ಹೆಚ್ಚು ಕಾಲ “ಮಾನಸಿಕ ಕಿರುಕುಳ ನೀಡಿದ್ದಾರೆ ಮತ್ತು ಅವಮಾನ” ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಅರುಣ್ ವಿಡಿಯೋ ರೆಕಾರ್ಡ್ ಮಾಡಿ ಅದರಲ್ಲಿ ತನ್ನ ದುಃಖವನ್ನು ಹೇಳಿಕೊಂಡಿದ್ದು, ಅದನ್ನು ಸಾವಿಗೆ ಸ್ವಲ್ಪ ಮೊದಲು ತರಗತಿಯ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ದೂರಿನ ಆಧಾರದ ಮೇಲೆ, ನಾವು ಮೂವರು ವಿದ್ಯಾರ್ಥಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಪ್ರಕರಣದ ತನಿಖೆ ನಡೆಯುತ್ತಿದೆ ಮತ್ತು ತನಿಖೆ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

No Comments

Leave A Comment