.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಶ್ರೀಲಂಕಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ, – 50ಕ್ಕೂ ಹೆಚ್ಚು ಮಂದಿ ಸಾವು

ಕೊಲಂಬೊ:ನ. 28,ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದ 600 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ, ಹೆಚ್ಚುತ್ತಿರುವ ವಿಪತ್ತು ಹಿನ್ನೆಲೆಯಲ್ಲಿ, ಶ್ರೀಲಂಕಾ ಸರ್ಕಾರ ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಕಳೆದ ವಾರದಿಂದಲೇ ಹವಾಮಾನ ವೈಪರೀತ್ಯಗೊಂಡಿದ್ದು, ಗುರುವಾರದಿಂದ ಮಳೆ ಪ್ರಮಾಣ ತೀವ್ರವಾಗಿ ಹೆಚ್ಚಿದ್ದು, ಮನೆಗಳು, ಹೊಲಗಳು ಹಾಗೂ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ದೇಶದ ಹಲವು ಭಾಗಗಳಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಕೊಲಂಬೊದಿಂದ ಪೂರ್ವಕ್ಕೆ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಬದುಲ್ಲಾ ಮತ್ತು ನುವಾರ ಎಲಿಯಾ ನಡುವಿನ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭೂಕುಸಿತಗಳಲ್ಲಿ 25 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ತುರ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ನಿರಂತರ ಮಳೆಯಿಂದ ಸಾರಿಗೆ ವ್ಯವಸ್ಥೆಯೂ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಭೂಕುಸಿತದ ಅಪಾಯದ ಹಿನ್ನೆಲೆಯಲ್ಲಿ ಅನೇಕ ಮಾರ್ಗಗಳಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪರ್ವತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶ್ರೀಲಂಕಾದಲ್ಲಿ ಮಳೆ ಮುಂದಿನ ಕೆಲ ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

No Comments

Leave A Comment