.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ರಘುನಾಥ್‌ ಹತ್ಯೆ ಕೇಸ್‌: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ

ಬೆಂಗಳೂರು: ಉದ್ಯಮಿ ಕೆ. ರಘುನಾಥ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಂಸದ ಡಿ.ಕೆ. ಆದಿಕೇಶವುಲು ಪುತ್ರ ಡಿ.ಎ ಶ್ರೀನಿವಾಸ್, ಪುತ್ರಿ ಡಿ.ಎ.ಕಲ್ಪಜಾ, ಡಿವೈಎಸ್‌ಪಿ ಎಸ್‌.ವೈ.ಮೋಹನ್ ಅವರನ್ನು ಸಿಬಿಐ ಪೊಲೀಸರು ಬಂಧಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ರಘುನಾಥ್ ಅನುಮಾನಾಸ್ಪದ ಸಾವು ಹಾಗೂ ನಕಲಿ ದಾಖಲೆಗಳ ಪ್ರಕರಣದಲ್ಲಿ ಆದಿಕೇಶವುಲು ಮಗ ಶ್ರೀನಿವಾಸ್‌ ಪುತ್ರಿ ಕಲ್ಪಜ ಹಾಗೂ ಡಿವೈಎಸ್‌ಪಿ ಮೋಹನ್ ಅವರನ್ನು 48ನೇ ಎಸಿಜೆಎಂ ನ್ಯಾಯಾಲಯ 7 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಆದೇಶಿಸಿದೆ. ರಘುನಾಥ್‌ಗೆ ಸೇರಿದ ಆಸ್ತಿ ಸಂಬಂಧ ನಕಲಿ ಛಾಪಾಕಾಗದ ಮತ್ತು ನಕಲಿ ವಿಲ್ ಸೃಷ್ಟಿ ಮಾಡಿದ ಆರೋಪದಲ್ಲಿ ಸಿಬಿಐ ಆರೋಪಿಗಳನ್ನು ಬಂಧಿಸಿದೆ.

ರಘುನಾಥ್ ಅವರು ಆದಿಕೇಶವುಲು ಅವರ ಆಪ್ತರಾಗಿದ್ದರು. 2019ರ ಮೇ 4ರಂದು ರಘುನಾಥ್ ನೇಣುಬಿಗಿದ ಸ್ಥಿತಿಯಲ್ಲಿ ಆದಿಕೇಶವುಲು ಅವರಿಗೆ ಸೇರಿದ ಅತಿಥಿ ಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಇದು ಆತ್ಮಹತ್ಯೆ ಎಂದು ಪ್ರಕರಣ ಮುಕ್ತಾಯಗೊಳಿಸಲಾಗಿತ್ತು.

ಆದರೆ, 2020ರ ಫೆ.15ರಂದು ರಘುನಾಥ್ ಪತ್ನಿ ಇದು ಕೊಲೆ ಎಂದು ಶಂಕಿಸಿ ದೂರು ನೀಡಲು ಮುಂದಾಗಿದ್ದರು. ದೂರು ಸ್ವೀಕರಿಸದಿದ್ದಾಗ ಖಾಸಗಿ ದೂರು ಸಲ್ಲಿಸಿದ್ದರು. ರಘುನಾಥ್ 2016ರಲ್ಲಿ ಪತ್ನಿ ಮಂಜುಳಾ ಹೆಸರಿಗೆ ವಿಲ್ ಬರೆದಿದ್ದರು. ರಘುನಾಥ್ ಬಳಿಯಿಂದ ಆಸ್ತಿಯನ್ನು ಶ್ರೀನಿವಾಸ್ ಮತ್ತು ಕಲ್ಪಜ ಬರೆಸಿಕೊಂಡ ಆರೋಪ ಕೇಳಿಬಂದಿತ್ತು.

ರಘುನಾಥ್ ಸಾವಿನ ಬಳಿಕ ಹೆಚ್‌ಎಎಲ್‌ ಪೊಲೀಸ್ ಠಾಣೆಗೆ ರಘುನಾಥ್ ಪತ್ನಿ ಮಂಜುಳ ದೂರು ನೀಡಿ, ಆದಿಕೇಶವುಲು ಮಕ್ಕಳಾದ ಶ್ರೀನಿವಾಸ್, ದಾಮೋದರ್, ರಾಮಚಂದ್ರಯ್ಯ ಮತ್ತು ಪ್ರತಾಪ್ ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ. ನಕಲಿ ವಿಲ್ ಅನ್ನು ಎಸಿ ಕೋರ್ಟ್‌ ಸಲ್ಲಿಕೆ ಮಾಡಿ ರಘುನಾಥ್ ಅವರ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಹೆಚ್‌ಎಎಲ್‌ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು.

ರಘುನಾಥ್ ಪತ್ನಿ ಬಿ ರಿಪೋರ್ಟ್ ಪಶ್ನಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದರು. ರಿಟ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಎಸ್‌ಐಟಿ ತನಿಖೆ ನಡೆಸಿ ಬಿ ರಿಪೋರ್ಟ್‌ ಸಲ್ಲಿಸಿತ್ತು. ಈ ಬಿ ರಿಪೋರ್ಟ್‌ ಪ್ರಶ್ನಿಸಿ ಮಂಜುಳ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ ಸಿಬಿಐ ತನಿಖೆಗೆ ಆದೇಶಿಸಿತ್ತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಅದೀಕೇಶವಲು ಕುಟುಂಬವರು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಸಿಬಿಐಗೆ ನೀಡಿರುವುದು ಸರಿಯಾಗಿದೆ ಎಂದು ಅಭಿಪ್ರಾಯಪಟ್ಟು ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿತ್ತು.

No Comments

Leave A Comment