...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಬೇಕಿದ್ದ ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ತೈಲ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಭದ್ರತಾ ಕಳವಳಕ್ಕೆ ಕಾರಣವಾಗಿದೆ.

ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಸಂಸ್ಕರಣಾಗಾರದ ಸಿಡಿಯು (ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ) ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸೋಮವಾರ ಸಂಜೆ ಸಂಸ್ಕರಣಾಗಾರಕ್ಕೆ ಭೇಟಿ ನೀಡಲಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಮತ್ತು ಬೆಂಕಿಯಿಂದ ಉಂಟಾದ ಹಾನಿಯ ಮೌಲ್ಯಮಾಪನವನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತದ ಮೊದಲ ಹಸಿರು ಕ್ಷೇತ್ರ ಸಂಯೋಜಿತ ಸಂಸ್ಕರಣಾಗಾರ-ಕಮ್-ಪೆಟ್ರೋಕೆಮಿಕಲ್ ಸಂಕೀರ್ಣವನ್ನು ಪ್ರಧಾನಿ ಮೋದಿ ಅವರು ನಾಳೆ ಉದ್ಘಾಟಿಸಲಿದ್ದಾರೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ರಾಜಸ್ಥಾನ ಸರ್ಕಾರ ಜಂಟಿಯಾಗಿ 79,450 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಅಭಿವೃದ್ಧಿಪಡಿಸಿದ್ದಾರೆ.

ಈ ಸಂಕೀರ್ಣವು 2.4 MMTPA ಪೆಟ್ರೋಕೆಮಿಕಲ್ ಸಾಮರ್ಥ್ಯವನ್ನು ಹೊಂದಿದ್ದು, ಕಚ್ಚಾ ತೈಲವನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿಣಾಮಕಾರಿಯಾಗಿ ಪರಿವರ್ತಿಸಲು ಅನುವು ಮಾಡಿಕೊಡುತ್ತದೆ. ಇದು ವ್ಯಾಪಕ ಶ್ರೇಣಿಯ ಕಚ್ಚಾ ತೈಲಗಳನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ.

No Comments

Leave A Comment