.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹಾಸನ: ಟೈರ್ ಸ್ಫೋಟದಿಂದ ಖಾಸಗಿ ಸ್ಲೀಪರ್​ ಬಸ್ ಬೆಂಕಿಗಾಹುತಿ; ಸ್ವಲ್ಪದರಲ್ಲೆ ಪ್ರಯಾಣಿಕರು ಪಾರು!

ಹಾಸನ: ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್ ಹಾಗೂ ಮೊಬೈಲ್ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮೊದಲು ಟೈರ್​ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಸಣ್ಣದೊಂದು ಶಬ್ದ ಕೇಳಿ ಬಂದಾಗ, ಬಸ್​ನಲ್ಲಿದ್ದ ಪ್ರಯಾಣಿಕನೋರ್ವ, ಕಿಟಕಿಯ ಪರದೆಯನ್ನು ಸರಿಸಿ ನೋಡಿದಾಗ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ಬಸ್​ ಚಾಲಕ ಹಾಗೂ ಎಲ್ಲಾ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾರೆ. ಇದರಿಂದ ಚಾಲಕ ಬಸ್​ ರಸ್ತೆ ಬದಿಗೆ ಪಾರ್ಕ್​ ಮಾಡಿದ್ದಾರೆ.

ಈ ವೇಳೆ ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಎಚ್ಚರಗೊಂಡು, ಅವಸರವಾಗಿ ಕೆಳಗಿಳಿಯುವ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ, ಅವರ ಲಗೇಜ್ ಮತ್ತು ಕೆಲವು ಬೆಲೆಬಾಳುವ ವಸ್ತುಗಳು ಮಾತ್ರ ಬೆಂಕಿಗೆ ಆಹುತಿಯಾಗಿವೆ. ಚಾಲಕ ಮತ್ತು ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಹಾಸನ ಮತ್ತು ಶಾಂತಿಗ್ರಾಮದಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ತೀವ್ರ ಹರಸಾಹಸ ಪಡಬೇಕಾಯಿತು. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಸುಟ್ಟು ಕರಕಲಾಗಿತ್ತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಕೊನೆಗೂ ಬೆಂಕಿಯನ್ನು ಪೂರ್ಣವಾಗಿ ಹತೋಟಿಗೆ ತಂದರು.

ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲುಕಿಕೊಂಡಿದ್ದ ಅಸಹಾಯಕ ಪ್ರಯಾಣಿಕರನ್ನು ಹಾಸನ ಪೊಲೀಸರು ಮತ್ತು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮರು ವ್ಯವಸ್ಥೆ ಮಾಡಿ ಮತ್ತೊಂದು ಪರ್ಯಾಯ ಬಸ್ ಮೂಲಕ ಬೆಂಗಳೂರಿಗೆ ಸುರಕ್ಷಿತವಾಗಿ ಕಳುಹಿಸಿಕೊಟ್ಟರು. ಈ ಅಪಘಾತದ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

No Comments

Leave A Comment