...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ದೊಡ್ಡಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್; ಹಾಲಿನ ಲಾರಿಯೂ ಬೆಂಕಿಗಾಹುತಿ

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ, ಸಮೀಪದಲ್ಲಿದ್ದ ಮತ್ತೊಂದು ಲಾರಿಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ.

ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಸಮೀಪ ಸಂಭವಿಸಿದೆ. ಪೆಟ್ರೋಲ್ ಟ್ಯಾಂಕರ್ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟ್ಯಾಂಕರ್‌ಗೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ವೇಗವಾಗಿ ವ್ಯಾಪಿಸಿ, ಅದೇ ವೇಳೆ ಸಮೀಪದಲ್ಲಿ ರಿವರ್ಸ್ ಮಾಡುತ್ತಿದ್ದ ಹಾಲಿನ ಲಾರಿಗೂ ಹರಡಿದೆ. ಕೆಲವೇ ಕ್ಷಣಗಳಲ್ಲಿ ಎರಡೂ ವಾಹನಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ.

ಆದರೆ, ಬೆಂಕಿ ಕಾಣಿಸಿಕೊಂಡ ತಕ್ಷಣವೇ ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಲಾರಿಯ ಚಾಲಕರು ವಾಹನಗಳಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅಪಘಾತ ಹಾಗೂ ಬೆಂಕಿಯಿಂದಾಗಿ ಆ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

No Comments

Leave A Comment