.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ

ಬೆಂಗಳೂರು:ಜುಲೈ, 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್‌ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ಎ, ಐಪಿಸಿ ಸೆ.509ರಡಿ ಕೇಸ್ನಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೆ ನ್ಯಾಯಾಧೀಶ ಸಂದೀಪ್ ಪಾಟೀಲ್ ಆದೇಶಿಸಿದ್ದಾರೆ.

ಪೆನ್​ಡ್ರೈವ್ ಮೂಲಕ ಅಶ್ಲೀಲ ಫೋಟೋ, ವಿಡಿಯೋ ಹಂಚಿಕೆ ಪ್ರಕರಣರದ ಎ2 ನವೀನ್ ಗೌಡ, ಎ3 ಹೆಚ್.ಪಿ.ಲಿಖಿತ್, ಎ4 ಎಂ.ಜೆ.ನಿಶಾಂತ್, ಎ5 ಎಸ್.ಕೆ.ಕಿರಣ್, ಎ6 ಎಂ.ಜಿ.ಶರತ್, ಎ7 ಡಿ.ಎನ್.ತೇಜಸ್, ಎ8 ಸಿ.ಗಗನ್ ಕುಮಾರ್, ಎ9 ಹೆಚ್​.ರೇವಂತ್​ಗೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ: ಪ್ರಕರಣ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸಿಇಎನ್ ಪೊಲೀಸ್ ಠಾಣೆಗೆ 2024ರ ಏ.23ರಂದು ದೂರು ನೀಡಿದ್ದರು. ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆ ಏ.26ರಂದು ನಿಗದಿಯಾಗಿತ್ತು. ಆರೋಪಿಗಳಾದ ನವೀನ್‌ಗೌಡ ಹಾಗೂ ಇತರರು ಏ.21ರಂದು ಸಂಜೆ 6.30ರಿಂದ ಹಾಸನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಕಲಿ ಅಶ್ಲೀಲ ಭಾವಚಿತ್ರ ಮತ್ತು ವಿಡಿಯೋಗಳನ್ನು ಒಳಗೊಂಡ ಸಿಡಿ ಹಾಗೂ ಪೆನ್​ಡ್ರೈವ್ ಸಿದ್ಧಪಡಿಸಿಕೊಂಡಿದ್ದಾರೆ. ಬಳಿಕ ಕ್ಷೇತ್ರ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರಿಗೆ ಹಂಚಿದ್ದಾರೆ. ವಾಟ್ಸ್​ಆ್ಯಪ್/ಮೊಬೈಲ್​ಗಳಲ್ಲಿ ತೋರಿಸಿ ಜನರಿಗೆ ದಿಕ್ಕು ತಪ್ಪಿಸಿ ಪ್ರಜ್ವಲ್ ರೇವಣ್ಣಗೆ ಮತ ಹಾಕದಂತೆ ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ನ್ಯಾಯಯುತ ಮತದಾನ ನಡೆಯುವುದನ್ನು ತಪ್ಪಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಈ ದೂರಿನ ಮೇರೆಗೆ ಅರ್ಜಿದಾರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 171 (ಜಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67(ಎ) ಅಡಿಯಲ್ಲಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲು ಸುಳ್ಳು ಹೇಳಿಕೆ ಪ್ರಕಟಿಸಿದ, ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋ ಪ್ರಕಟಿಸಿದ ಮತ್ತು ರವಾನಿಸಿದ ಆರೋಪ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

No Comments

Leave A Comment