....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಕಾಕ್ರೋಚ್’ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಸುನಿಲ್ ಕುಮಾರ್

ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಆರೋಪಿಸಿದರು.

ಕಾಕ್ರೋಚ್ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ದೇಶವನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಯಾವುದೇ ಸರ್ಕಾರ ಸಮರ್ಥಿಸಿಲ್ಲ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಮರುಪರೀಕ್ಷೆ ನಡೆಸಲಾಗಿತ್ತು. ಆದರೆ, ಇಂತಹ ಘಟನೆಗಳನ್ನು ನೆಪವಾಗಿಸಿಕೊಂಡು ದೇಶದ ವಿರುದ್ಧ ವಾತಾವರಣ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ಅಧಿಕಾರ ಅವಧಿಯಲ್ಲಿ ಭಾರತ ದೇಶದ ಪ್ರತಿಷ್ಠೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗಿದೆ. ಆದರೆ, ದೇಶವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೆಲವು ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ಕಾಂಗ್ರೆಸ್‌ಗೆ ಚುನಾವಣಾ ವ್ಯವಸ್ಥೆ, ಸಂಸತ್ತು ಹಾಗೂ ಕಾನೂನಿನ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದರು.

ಸಮಾಜವಿರೋಧಿ ಹಾಗೂ ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸುವ ದೇಶವಿರೋಧಿ ಚಟುವಟಿಕೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾದಾಗ ಮುಸ್ಲಿಮರನ್ನು ಎತ್ತಿಕಟ್ಟುವ ಪ್ರಯತ್ನ ನಡೆದಿತ್ತು. ಸರ್ಜಿಕಲ್ ಸ್ಟ್ರೈಕ್ ಮತ್ತು ‘ಆಪರೇಷನ್ ಸಿಂಧೂರ್’ ಸಂದರ್ಭದಲ್ಲಿಯೂ ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ಪ್ರಶ್ನಿಸಲಾಗಿತ್ತು. ಇದೇ ರೀತಿಯ ಮನೋಭಾವದವರು ಈಗ ಕಾಕ್ರೋಚ್ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಚಳವಳಿಯ ಹೆಸರಿನಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ಹಾಗೂ ಪೊಲೀಸರ ಮೇಲೆ ದಾಳಿ ನಡೆಸುವುದನ್ನು ಭಾರತೀಯ ಸಮಾಜ ಒಪ್ಪುವುದಿಲ್ಲ. ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಭಾಷೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, ಇಂತಹ ಪ್ರತಿಭಟನೆಗಳ ಉದ್ದೇಶವೇ ದೇಶದಲ್ಲಿ ಅಶಾಂತಿ ಸೃಷ್ಟಿಸುವುದಾಗಿದೆ ಎಂದು ಹೇಳಿದರು.

ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಎ. ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಕೆ.ಉದಯಕುಮಾರ್ ಶೆಟ್ಟಿ,ತಿ೦ಗಳೆ ವಿಕ್ರಮಾರ್ಜುನ ಹೆಗ್ಡೆ,ಮಟ್ಟಾರು ರತ್ನಾಕರ್ ಹೆಗ್ಡೆ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಅಲೆವೂರು, ದಿನಕರ್ ಬಾಬು, ಸುರೇಶ್ ನಾಯಕ್ ಕುಯಿಲಾಡಿ, ಲಾಲಾಜಿ ಆರ್. ಮೆಂಡನ್, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶ್ಯಾಮಲ್ ಎಸ್. ಕುಂದರ್ ,ವೀಣಾ ಎಸ್ ಶೆಟ್ಟಿ ಉಪಸ್ಥಿತರಿದ್ದರು.

No Comments

Leave A Comment