....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...
ಮಹಾರಾಷ್ಟ್ರದ ಶಾಲಾ ಹಾಸ್ಟೆಲ್ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು
ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ವಸತಿ ಶಾಲೆಯೊಂದರಲ್ಲಿ ವಿಷದ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟಿದ್ದು, ಮೂವರು ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಘಟನೆ ಬೆನ್ನಲ್ಲೇ ಜಿಲ್ಲಾ ಆಡಳಿತ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಶಾಲೆಯ ಹಾಸ್ಟೆಲ್ನಲ್ಲಿ ನೆಲದ ಮೇಲೆ ಮಲಗಿದ್ದ ವೇಳೆ ಬಾಲಕಿಯರಿಗೆ ವಿಷದ ಹಾವು ಕಚ್ಚಿದೆ. ಹಾವು ಕಡಿತಕ್ಕೆ ಒಳಗಾದವರ ಪೈಕಿ 8, 12 ಮತ್ತು 14 ವರ್ಷದ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. 11ರಿಂದ 14 ವರ್ಷದೊಳಗಿನ ಮತ್ತೂ ಮೂವರು ಬಾಲಕಿಯರು ಹಾವು ಕಡಿತದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆ ಹೇಗೆ ಸಂಭವಿಸಿತು, ವಿದ್ಯಾರ್ಥಿನಿಯರು ವಾಸಿಸುತ್ತಿದ್ದ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೇ ಹಾಗೂ ಶಾಲಾ ಆಡಳಿತವು ನಿಗದಿತ ಸುರಕ್ಷತಾ ನಿಯಮಗಳು ಮತ್ತು ಮುನ್ನೆಚ್ಚರಿಕೆಗಳನ್ನು ಪಾಲಿಸಿತ್ತೇ ಎಂಬುದನ್ನು ತಿಳಿಯಲು ಸಮಗ್ರ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಅವಿಷ್ಯಂತ್ ಪಾಂಡಾ ತಿಳಿಸಿದ್ದಾರೆ.
ಶಾಲೆಯಲ್ಲಿನ ಸುರಕ್ಷತಾ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದು, ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಾವು ಕಡಿತಕ್ಕೆ ಒಳಗಾದ ಮೂವರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರಿದಿದೆ. ಅವರಿಗೆ ತಕ್ಷಣವೇ ಹಾವು ವಿಷ ನಿರೋಧಕ ಔಷಧಿ ನೀಡಲಾಗಿದ್ದು, ವೈದ್ಯಕೀಯ ತಂಡಗಳು ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿನಿಯರಿಗೆ ವಿಶೇಷ ಕಾಳಜಿ ಮತ್ತು ಅಗತ್ಯ ವೈದ್ಯಕೀಯ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದ್ದಾರೆ.