.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್‌ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಶ್ರಾವಣ ಮಾಸದ ಮೂರನೇ ಸೋಮವಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಸುಮಾರು 6.45ರ ವೇಳೆಗೆ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ಈ ವೇಳೆ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿದ್ದರಿಂದ ಭಕ್ತರಲ್ಲಿ ಆತಂಕ ಉಂಟಾಗಿ, ಏಕಾಏಕಿ ಜನರು ಓಡಲು ಆರಂಭಿಸಿದ ಪರಿಣಾಮ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಲಖಿಸರಾಯಿ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಅವರ ಪ್ರಕಾರ, ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಲ್ಲಿ ಆಡಳಿತವು ವ್ಯವಸ್ಥೆ ಮಾಡಿತ್ತು. ಆದರೆ ನಿರೀಕ್ಷೆಗೂ ಮೀರಿದ ಜನಸಂದಣಿ ಉಂಟಾಗಿದ್ದು, ಜನರ ಒತ್ತಡಕ್ಕೆ ಬ್ಯಾರಿಕೇಡ್‌ನ ಒಂದು ಭಾಗ ಕುಸಿದು ಜನರು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ.

ಗಾಯಗೊಂಡವರನ್ನು ತಕ್ಷಣವೇ ಲಖಿಸರಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಳಿಕ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿವೆ.

ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ದೇವಸ್ಥಾನದ ಪ್ರವೇಶದ್ವಾರದ ಬಳಿ ಸುಮಾರು 100 ಮಂದಿ ಬ್ಯಾರಿಕೇಡ್‌ಗಳನ್ನು ದಾಟಲು ಮುಂದಾದಾಗ ನೂಕುನುಗ್ಗಲು ಉಂಟಾಗಿದೆ. ಇಳಿಜಾರಿನಂತಿದ್ದ ಕಿರಿದಾದ ಮಾರ್ಗದಲ್ಲಿ ಭಕ್ತರು ಒಬ್ಬರನ್ನೊಬ್ಬರು ತಳ್ಳಿಕೊಂಡ ಪರಿಣಾಮ ಬ್ಯಾರಿಕೇಡ್‌ ಕುಸಿದು ಹಲವರು ಕೆಳಗೆ ಬಿದ್ದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿದ್ಯುತ್ ತಂತಿ ಬಿದ್ದಿದ್ದರಿಂದ ಉಂಟಾದ ಭೀತಿ ಹಾಗೂ ಭಾರೀ ಜನಸಂದಣಿ ಎರಡೂ ಘಟನೆಗೆ ಕಾರಣವಾಗಿರಬಹುದೆಂದು ಪ್ರಾಥಮಿಕ ಮಾಹಿತಿ ಸೂಚಿಸಿದೆ.

No Comments

Leave A Comment